ಮಂಗಳೂರು: ನಮ್ಮ ದೇಶ ಒಂದು ಪ್ರಜಾಪ್ರಭುತ್ವದ ದೇಶ. ಈ ದೇಶದಲ್ಲಿ ಪ್ರಜೆಗಳೇ ಪ್ರಭುಗಳು. ಅಂದರೆ ಹುಟ್ಟಿದ ದಿನದಿಂದ ಪ್ರತಿಯೊಬ್ಬ ಇಲ್ಲಿ ನಾಗರಿಕ ವ್ಯಕ್ತಿಯಾಗಿ ಬೆಳೆಯುತ್ತಾನೆ. ಆದರೆ ೧೮ ವರ್ಷ ತುಂಬಿದ ನಂತರ ಆ ನಾಗರೀಕ ತನ್ನ ಹಕ್ಕನ್ನು ಸ್ಥಾಪನೆ ಮಾಡಲು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ-2023ರ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವದ ಭವಿಷ್ಯಕ್ಕಾಗಿ ಪ್ರತಿಯೊಬ್ಬ ನಾಗರಿಕನೂ ತನ್ನ ಮತದಾನದ ಹಕ್ಕನ್ನು ಚಲಾಯಿಸಬೇಕು. ಈ ದೇಶದಲ್ಲಿ ಸುರಕ್ಷೆ ಹಾಗೂ ಸಂರಕ್ಷಣೆಯ ದೃಷ್ಟಿಯಿಂದ ಉತ್ತಮ ರೀತಿಯ ಪ್ರಜಾಪ್ರಭುತ್ವದ ಸರ್ಕಾರವನ್ನು ತರಲು ನಾವೆಲ್ಲರು ಸಹಕರಿಸಬೇಕು ಎಂದರು.
ಚುನಾವಣೆಯ ಸಂದರ್ಭದಲ್ಲಿ ಹಲವಾರು ಜನ 18 ವರ್ಷ ತುಂಬಿದ್ದರು ಸಹ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿರುವುದಿಲ್ಲ. ಹೀಗಾಗಿ ನಮ್ಮ ದೇಶದ ಮುಂದಿನ ಯುವ ಪೀಳಿಗೆ ದೇಶದ ಉತ್ತಮ ಭವಿಷ್ಯಕ್ಕಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನಿರ್ವಾಹಣಾಧಿಕಾರಿ ಡಾ.ಕುಮಾರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಸಾವಿರಾರು ಸಂಖ್ಯೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.