ಮಂಗಳೂರು: ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದು ಜೊತೆಗೆ ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ ಸುಂದರ್ ರಾವ್ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಪಂಪ್ ವೆಲ್ ನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಹಾಗೂ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅದ್ಭುತ ವಾಕ್ ಚಾತುರ್ಯ ಮತ್ತು ಪ್ರಾಸಬದ್ಧ ಸಂಭಾಷಣೆಯಿಂದ ಹೆಸರುವಾಸಿಯಾಗಿದ್ದರು.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದರು.
ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದರು ಕುಂಬ್ಳೆ ಸುಂದರ್ ರಾವ್ ಅವರ ನಿಧನಕ್ಕೆ ಯಕ್ಷಕಲಾರಂಗ ಸಂತಾಪ ಸೂಚಿಸಿದೆ. ನಾಳೆ ಮಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.