ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವುದನ್ನು ಚಾರ್ಮಾಡಿ ಚೆಕ್ ಪೋಸ್ಟ್ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಈ ಸಂಬಂಧ ಚಾಲಕನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ವಾಹನವನ್ನು ಜಪ್ತಿ ಮಾಡಲಾಗಿದ್ದು,ಮೂರು ಜಾನುವಾರುಗಳನ್ನು ರಕ್ಷಿಸಲಾಗಿದೆ.
ಮೂಡಿಗೆರೆ ತಾಲೂಕಿನ ಕೂಡಹಳ್ಳಿ ನಿವಾಸಿ ಪದ್ಮೇಶ್ (41) ಬಂಧಿತ ಆರೋಪಿ. ಪ್ರಮುಖ ಆರೋಪಿ ಸಾಲೆತ್ತೂರು ನಿವಾಸಿ ಹಮೀದ್ ಸ್ಥಳದಿಂದ ಪರಾರಿಯಾಗಿದ್ದಾನೆ. ಚೆಕ್ ಪೋಸ್ಟ್ ಬಳಿ ಅತೀ ವೇಗದಲ್ಲಿ ಬಂದ ಪಿಕಪ್ ಅನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ.
ಈ ವೇಳೆ ಪರವಾನಿಗೆ ಇಲ್ಲದೆ ಮೂರು ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ವಿಚಾರಣೆ ನಡೆಸಿದಾಗ ಜಾನುವಾರುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿ ತಿಳಿಸಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.