ಮಂಗಳೂರು: ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು.
ದಕ್ಷಿಣ ಕನ್ನಡದ ಸರ್ಕಾರಿ ಮತ್ತು ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ನೀಡಿದರು. ಅಂಗನವಾಡಿಯಿಂದ ಡಿಗ್ರಿ ಕಾಲೇಜ್ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿತ್ತು. ಭಾರೀ ಮಳೆಯಿಂದಾಗಿ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು.
ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಉಳ್ಳಾಲದಲ್ಲಿ ಸಮುದ್ರ ಬೋರ್ಗರೆಯುತ್ತಿದ್ದು, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ, ಸಿ ಗ್ರೌಂಡ್ ಮುಂತಾದ ಪ್ರದೇಶಗಳಲ್ಲಿ ಕಡಲ ಕೊರೆತ ತೀವ್ರವಾಗಿದ್ದು, ರಸ್ತೆ, ಮನೆಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.
ಬೆಟ್ಟಂಪಾಡಿ ಯಲ್ಲಿ ಅಲೆಗಳ ಅಬ್ಬರಕ್ಕೆ ಈಗಾಗಲೇ ರಸ್ತೆಯ ಜತೆ ಕಾಲುದಾರಿ ಸಮುದ್ರದ ಮಡಿಲು ಸೇರಿದೆ. ಇದರಿಂದ ರಸ್ತೆ ಹಾಗೂ ಕಾಲುದಾರಿ ಸಂಪರ್ಕವೇ ಇಲ್ಲದೇ ಸುಮಾರು 30ಕ್ಕೂ ಅಧಿಕ ಮನೆಗಳ ನಿವಾಸಿಗಳು ಪರದಾಟ ನಡೆಸುತ್ತಿದ್ದಾರೆ.
ಸಮುದ್ರ ಸಮೀಪದ ಮನೆಗಳಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಕಡಲ ತೀರದ ಮನೆಗಳ ನಿವಾಸಿಗಳು ಆತಂಕ ಕ್ಕೀಡಾಗಿದ್ದಾರೆ. ಮುಖ್ಯ ರಸ್ತೆ ಸಮುದ್ರ ಪಾಲಾಗಿದ ಹಿನ್ನೆಲೆಯಲ್ಲಿ ಒಳ ರಸ್ತೆ ಪ್ರಯೋಜನಕ್ಕೆ ಬಾರದ ಸ್ಥಿತಿಯಲ್ಲಿವೆ. ಜನರಲ್ಲಿ ಪ್ರಾಣ ಭೀತಿ ಆವರಿಸಿದೆ. ವಾಹನ ಇದ್ದವರು ರಸ್ತೆ ಇಲ್ಲದ ಕಾರಣ ಉಪಯೋಗಿಸಲಾಗದೆ ತೊಂದರೆಗೊಳಗಾಗಿದ್ದಾರೆ. ಕೆಲಸಕ್ಕೆ ಹೋಗುವವರು ಹಾಗೂ ಮನೆಗೆ ದಿನಬಳಕೆಯ ವಸ್ತುಗಳನ್ನು ತರುವವರ ಮೇಲೆ ಪರಿಣಾಮ ಬೀರಿದೆ. ಅಗತ್ಯ ಸಾಮಾನುಗಳನ್ನು ತುಂಬಿಕೊಂಡು ಬರಬೇಕಾದ ಪರಿಸ್ಥಿತಿ ಇದೆ. ರಸ್ತೆ ಸಮಸ್ಯೆ ಯಿಂದ ಶಾಲಾ ವಿದ್ಯಾರ್ಥಿಗಳ ಮೇಲೂ ಪರಿಣಾಮ ಬೀರಿದೆ. ವಾಹನಗಳಲ್ಲಿ ಹೋಗುತ್ತಿದ್ದವರು ನಡೆದು ಕೊಂಡು ಹೋಗಬೇಕಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಬೃಹತ್ ಮರ ರಸ್ತೆಗುರುಳಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಗಳೂರು ಹೊರವಲಯದ ಮಾಡೂರು ಬಳಿ ಬೀರಿಯಿಂದ ದೇರಳಕಟ್ಟೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ. ವಿದ್ಯುತ್ ಕೇಬಲ್ ಲೈನ್ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಮರ ಉರುಳಿ ಬಿದ್ದು ಬೆಳಿಗ್ಗಿನಿಂದ ವಿದ್ಯುತ್ ಸಂಚಾರ ವ್ಯತ್ಯಯವಾಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳೆಲ್ಲ ಸಂಪೂರ್ಣ ಜಲಾವೃತವಾಗಿದೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಕಳೆದೊಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದು ಕೂಡ ಮುಂದುವರಿದ್ದು, ಸುಬ್ರಹ್ಮಣ್ಯ, ಬೆಳ್ತಂಗಡಿ, ಬಂಟ್ವಾಳ ಮುಂತಾದೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳ್ತಂಗಡಿಯಲ್ಲಿ ಈ ವರ್ಷವೂ ಪ್ರವಾಹದ ಆತಂಕ ಎದುರಾಗಿದೆ. ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಸುಳ್ಯ ತಾಲ್ಲೂಕಿನ ಕಡಬ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ ಮುಂದುವರಿದೆ. ಹಲವೆಡೆ ಮಣ್ಣು ಕುಸಿತ ಮುಂದುವರಿದಿದೆ. ಹಲವು ಕಡೆ ಮರಗಳು ಧರೆಗುರುಳಿವೆ.
ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಜಿಲ್ಲೆಗಳಲ್ಲಿ ಕೂಡ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿಯೂ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ.