ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ನಗರದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಕೊಡುಗೆಯಿಲ್ಲದ ಕಾರಣ ಬಿಜೆಪಿ ದಯನೀಯ ಸ್ಥಿತಿಯಲ್ಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ಜನತೆ ರಾಜ್ಯವನ್ನು ಮೋದಿಯ ಕೈಗೆ ಒಪ್ಪಿಸಬೇಕು ಎಂಬ ಹೇಳಿಕೆಗೆ ಬಗ್ಗೆ ವಾಗ್ದಾಳಿ ನಡೆಸಿದ ವೇಣುಗೋಪಾಲ್, ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಹಿಂದಿನ ಚುನಾವಣೆಯಲ್ಲೂ ಬಿಜೆಪಿಯನ್ನು ಜನರು ಅಧಿಕಾರಕ್ಕೆ ತರಲಿಲ್ಲ, ಆದರೆ ಅವರು ಕುದುರೆ ವ್ಯಾಪಾರದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ 40 ಪರ್ಸೆಂಟ್ ಎಂದು ಕುಖ್ಯಾತಿ ಪಡೆದೆ ಎಂದರು. ಭ್ರಷ್ಟಾಚಾರ ವಿಚಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ದಾಖಲೆ ಮಾಡಿದ್ದಾರೆ ಎಂದರು. ಅಲ್ಲದೆ ದಕ್ಷಿಣ ಕನ್ನಡಕ್ಕೆ ಬಿಜೆಪಿ ಕೊಡುಗೆ ಏನು ಎಂದು ಪ್ರಶ್ನಿಸಿದರು. ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಲ್ಲ, ಕೇವಲ ಕೋಮು ಭಾವನೆ ಕೆರಳಿಸುವುದೇ ಅವರ ಕೆಲಸ ಎಂದರು.
ಎಂಎಲ್ಸಿ ಹರೀಶ್ ಕುಮಾರ್, ಎಚ್ ಪದ್ಮರಾಜ್ ಮತ್ತಿತರರು ಉಪಸ್ಥಿತರಿದ್ದರು.