ಉಜಿರೆ: ಶ್ರೀ ಸಿದ್ದವನ ಗುರುಕುಲದಲ್ಲಿದ್ದು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವಾರ್ಷಿಕ ಪರೀಕ್ಷೆಗಳಿಗೆ ಶುಭ ಹಾರೈಸಿದರು.
“ಸಮಯ ಪ್ರಜ್ಞೆ ,ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯದಿಂದ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯ” ಎಂದರು.
“ಸಿದ್ದವನ ಗುರುಕುಲ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡುತ್ತಾ ಜಾತಿ, ಮತ, ಧರ್ಮಗಳ ಭೇದ ಭಾವವಿಲ್ಲದೆ ಸರ್ವರಿಗೂ ಸಮಾನ ಸೌಲಭ್ಯಗಳನ್ನು ಒದಗಿಸುವುದರ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ತಾಣವಾಗಿದೆ, ಇಲ್ಲಿ ಕಲಿತ ವಿಶೇಷ ಅನುಭವವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ , ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಹಾಗೂ ಜೈನ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ವಿಶೇಷ ಪ್ರಮಾಣ ಪತ್ರಗಳನ್ನು ನೀಡಿ ಹರಸಿದರು.
ಎಸ್ ಡಿ ಎಂ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಬಿ.ಎ.ಕುಮಾರ ಹೆಗ್ಡೆ, ಐಟಿ ವಿಭಾಗದ ಸಿಇಒ ಪೂರನ್ ವರ್ಮ, ಪಾಲಕರಾದ ಕೇಶವ್ ನಾಯ್ಕ,ಮಹಾವೀರ್ ಮೊದಲಾದವರು ಉಪಸ್ಥಿತರಿದ್ದರು.