ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯ ಪ್ರಯುಕ್ತ ವಿದ್ಯಾಸಂಸ್ಥೆಯ 1200 ಮಂದಿ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರದರ್ಶಿಸುವ ಮೂಲಕ ಗಮನ ಸೆಳೆದರು.
ಶಾಲೆಯ ವಿಶಾಲವಾದ ಕಲಿಕಾ ಸಭಾಭವನದಲ್ಲಿ ಯೋಗ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಶಾಲಾ ದತ್ತು ಸಂಸ್ಥೆ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ನಿತ್ಯ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪಡೆಯಲು ಸಾದ್ಯವಿದೆ.
ಯೋಗದಿಂದ ಕಾಯಿಲೆಗಳು ದೂರವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಒಳಿತಿಗಾಗಿ ಯೋಗಭ್ಯಾಸ ಮಾಡಬೇಕು ಎಂದು ತಿಳಿಸಿದರು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ರಮಾನಂದ್ ಅವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಪ್ರೌಢಶಾಲಾ ವಿಭಾಗದ ಎಸ್ಡಿಎಂಸಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಟ್ರಸ್ಟಿ ರಾಮಚಂದ್ರ ಪೂಜಾರಿ ಕರೆಂಕಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ ಉಪಸ್ಥಿತರಿದ್ದರು.
ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿದರು. ದಡ್ಡಲಕಾಡು ಶಾಲೆಯಲ್ಲಿ ಪ್ರತಿದಿನ ಬೆಳಿಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯ ಯೋಗಾಸನ ತರಬೇತಿಯನ್ನು ನೀಡಲಾಗುತ್ತಿದೆ.