ಉಡುಪಿ: ಇದೇ ಬರುವ ಮೇ.3ರಂದು ಮುಲ್ಕಿಯಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ 3ಲಕ್ಷಕ್ಕೂ ಅಧಿಕ ಜನರು ಸೇರಲಿದ್ದಾರೆ ಎಂದು ಬಿಜೆಪಿಯ ಮಂಗಳೂರು ವಿಭಾಗದ ಪ್ರಭಾರಿ ಉದಯ್ ಕುಮಾರ್ ಶೆಟ್ಟಿಯವರು ತಿಳಿಸಿದ್ದಾರೆ.
ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ಉಡುಪಿಯ 5 ವಿಧಾನಸಭಾ ಕ್ಷೇತ್ರ, ದಕ್ಷಿಣ ಕನ್ನಡದ 8 ವಿಧಾನ ಸಭಾ ಕ್ಷೇತ್ರಗಳನ್ನು ಒಗ್ಗೂಡಿಸಿ ಆಯೋಜಿಸಲಾಗಿದೆ. 3 ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ ಇದೆ. ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಿಂದ 20 ಸಾವಿರ ಜನರ ಬರುವ ಸಾಧ್ಯತೆ ಇದೆ ಎಂದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೇ 6ರಂದು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಉಭಯ ಜಿಲ್ಲೆಗಳಿಗೆ ಆಗಮಿಸಲಿದ್ದಾರೆ. ಅಂದು 12 ಗಂಟೆಗೆ ಪುತ್ತೂರಿಗೆ, 1.30ಕ್ಕೆ ಬಂಟ್ವಾಳ ಮತ್ತು 3 ಗಂಟೆಗೆ ಕಾರ್ಕಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಪ್ರಮೋದ್ ಮದ್ವರಾಜ್ , ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ,ಜಿಲ್ಲಾ ಸಹ ವಕ್ತಾರ ಅಂಬಾಲಪಾಡಿ ಶಿವಕುಮಾರ್ ಉಪಸ್ಥಿತರಿದ್ದರು.