ಮಂಗಳೂರು: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ತಿಳಿಸಿದ್ದಾರೆ. ಬಂಧಿತರನ್ನು ಕಾರ್ಕಳ ನಿವಾಸಿ ಗಣೇಶ್ ನಾಯ್ಕ್ (26) ಮತ್ತು ಕೊಡಗಿನ ರಂಜಿತ್ ಕೆ ಆರ್ (26) ಎಂದು ಗುರುತಿಸಲಾಗಿದೆ.
ಆರೋಪಿಗಳು ಇದೇ ಜನವರಿ ತಿಂಗಳಿನಲ್ಲಿ ಗುತ್ತಕಾಡು ಐಕಳ ಹರೀಶ್ ಶೆಟ್ಟಿ ಎಂಬುವರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದರು. ಅವರಿಂದ 55 ಲಕ್ಷ ಮೌಲ್ಯದ ಒಂದು ಕಿಲೋ ಚಿನ್ನಾಭರಣ, ಎರಡು ಮೊಬೈಲ್ ಫೋನ್ಗಳು ಮತ್ತು ಕಳ್ಳತನಕ್ಕೆ ಬಳಸಿದ್ದ ಎರಡು ರಾಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 56,50,000 ರೂ. ಆಗಿದೆ. ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮತ್ತು ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಆರೋಪಿ ಗಣೇಶ್ ನಾಯ್ಕ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ದಾಖಲಾಗಿತ್ತು. ಪ್ರಕರಣ ಭೇದಿಸಿದ ತಂಡಕ್ಕೆ ಪೊಲೀಸ್ ಕಮಿಷನರ್ 10,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಸಿಸಿಬಿ ಎಸಿಪಿ ಪಿ ಎ ಹೆಗ್ಡೆ, ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್, ರಾಜೇಂದ್ರ, ಸುದೀಪ್ ಮತ್ತಿತರರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.