ಉಡುಪಿ : ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಏರುಗತಿಯಲ್ಲಿ ಸಾಗಿರುವ ಕೋವಿಡ್ ಪಾಸಿಟಿವ್ ಬುಧವಾರ 361ಕ್ಕೆ ನೆಗೆದಿದೆ. ದಿನದಲ್ಲಿ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ 1625ಕ್ಕೇರಿದೆ. ಬುಧವಾರ 78 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಬುಧವಾರ ಪಾಸಿಟಿವ್ ಬಂದ 361 ಮಂದಿಯಲ್ಲಿ 178 ಮಂದಿ ಪುರುಷ ರಾದರೆ 183 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 281 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಕುಂದಾಪುರ ತಾಲೂಕಿನ 26 ಮಂದಿ ಹಾಗೂ ಕಾರ್ಕಳ ತಾಲೂಕಿನ 54 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಈ ಮೂರು ತಾಲೂಕುಗಳ ಪಾಸಿಟಿವಿಟಿ ಪ್ರಮಾಣ ಸದ್ಯ ಶೇ.7.41, ಶೇ.2 ಹಾಗೂ ಶೇ.3.90 ಆಗಿದೆ. ಜಿಲ್ಲೆಯ ಪ್ರಮಾಣ ಶೇ.5.57ರಲ್ಲಿದೆ.
ಬುಧವಾರ ಪಾಸಿಟಿವ್ ಬಂದ 361 ಮಂದಿಯಲ್ಲಿ 24 ಮಂದಿಯನ್ನು ಕೋವಿಡ್ ಕೇರ್ ಸೆಂಟರ್ಗೂ, ನಾಲ್ವರನ್ನು ಕೋವಿಡ್ ಆಸ್ಪತ್ರೆಗೂ, ಏಳು ಮಂದಿ ಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 326 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
80 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ: ಜಿಲ್ಲೆಯಲ್ಲೀಗ 80 ಮಂದಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತಿದ್ದಾರೆ. ಇವರಲ್ಲಿ ಆರು ಮಂದಿ ಐಸಿಯು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತಿದ್ದರೆ 12 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 8 ಮಂದಿ ಎಚ್ಡಿಯು ಹಾಗೂ 54 ಮಂದಿ ಜನರಲ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಮಂಗಳವಾರ 78 ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಜಿಲ್ಲೆಯಲ್ಲಿ ಜ.1ರಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 376ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ ಉಡುಪಿ ತಾಲೂಕಿನಲ್ಲಿ 3793 ಮಂದಿ, ಕುಂದಾ ಪುರದಲ್ಲಿ 1300 ಹಾಗೂ ಕಾರ್ಕಳ ತಾಲೂಕಿನ 1383 ಮಂದಿ ಸೇರಿದಂತೆ ಒಟ್ಟು 6476 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 1853ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.
1084 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 1084 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 284 ಮಂದಿ ಲಸಿಕೆ ಪಡೆದರೆ, 589 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 211 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.
4945 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 4945 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 2206 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 3363 ಮಂದಿ ಮೊದಲ ಡೋಸ್ ಹಾಗೂ 1582 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ಉಡುಪ ತಿಳಿಸಿದ್ದಾರೆ.