ಉಡುಪಿ : ಶನಿವಾರ ಜಿಲ್ಲೆಯಲ್ಲಿ 63 ವರ್ಷ ಪ್ರಾಯದ ಪುರುಷ ರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾದರೆ, 14 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದಲ್ಲಿ ನಾಲ್ವರು ಸೋಂಕು ಮುಕ್ತರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 46ಕ್ಕೆ ನೆಗೆದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಉಸಿರಾಟ ತೊಂದರೆ, ಜ್ವರ, ಕೆಮ್ಮು ಸಹಿತ ಕೋವಿಡ್ನ ಎಲ್ಲಾ ಗುಣಲಕ್ಷಣ ಹೊಂದಿದ್ದ ಉಡುಪಿಯ ವೃದ್ಧರು ಮಧುಮೇಹ ಹಾಗೂ ಹೃದಯ ಸಮಸ್ಯೆಯಿಂದ ಬಳಲುತಿದ್ದರು. ಇವರನ್ನು ಗುರುವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶುಕ್ರವಾರ ಮೃತಪಟ್ಟರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 479ಕ್ಕೇರಿದೆ.
ದಿನದಲ್ಲಿ ಪಾಸಿಟಿವ್ ಬಂದ 14 ಮಂದಿಯಲ್ಲಿ 13 ಮಂದಿ ಪುರುಷರು ಹಾಗೂ ಒಬ್ಬರು ಮಾತ್ರ ಮಹಿಳೆ. ಇವರೆಲ್ಲರೂ ಉಡುಪಿ ತಾಲೂಕಿಗೆ ಸೇರಿದವರು. ಸೋಂಕು ಪತ್ತೆಯಾದ ಎಲ್ಲಾ 14 ಮಂದಿಯನ್ನು ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ ನಾಲ್ವರು ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,497ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4189 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,022ಕ್ಕೇರಿದೆ.
689 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಶನಿವಾರ 689 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 95 ಮಂದಿ ಮೊದಲ ಡೋಸ್ ಹಾಗೂ 594 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 70 ಮಂದಿ ಮೊದಲ ಡೋಸ್ ಹಾಗೂ 457 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 25 ಮಂದಿ ಮೊದಲ ಡೋಸ್ ಹಾಗೂ 134 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇವರೊಂದಿಗೆ ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ಓರ್ವ ಮುಂಚೂಣಿ ಕಾರ್ಯಕರ್ತನೂ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.