ಉಡುಪಿ : ಭಾರೀ ಗಾಳಿ ಮಳೆಯ ಪರಿಣಾಮ ಇಂದು ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದ ದುರ್ಘಟನೆ ಕಂಚುಗೋಡು ಸಮೀಪದ ಕಡಲಿನಲ್ಲಿ ಸಂಭವಿಸಿದೆ. ದೋಣಿಯಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ರಕ್ಷಿಸಲ್ಪಟ್ಟ ಮೀನುಗಾರರಾಗಿದ್ದಾರೆ.
ರಾಮ ಖಾರ್ವಿ ಅವರ ಓಂಕಾರ ಪ್ರಸನ್ನ ಎಂಬ ದೋಣಿಯಲ್ಲಿ ಮುಂಜಾವ ಮೂವರು ಮೀನುಗಾರಿಕೆಗೆ ತೆರಳಿದ್ದರು. ಬೆಳಗ್ಗೆ 8ಗಂಟೆ ಸುಮಾರಿಗೆ ಭಾರೀ ಗಾಳಿ ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿಯು ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿಬಿದ್ದಿದೆ. ದೋಣಿ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ಮೂವರು ಮೀನುಗಾರರನ್ನು ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ರಕ್ಷಿಸಿ, ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.