ಕಾರವಾರ: ಪಿ.ಎಂ. ಕೇರ್ಸ್ ನಿಧಿಯಿಂದ ದೇಶದ ವಿವಿಧೆಡೆ ನಿರ್ಮಾಣವಾಗಿರುವ ಆಕ್ಸಿಜನ್ ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟನೆಗೊಳಿಸಿದ್ದು, ಅದೇ ಸಮಯದಲ್ಲಿ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಿರ್ಮಾಣವಾದ ಆಕ್ಸಿಜನ್ ಘಟಕವನ್ನೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿ, ಕಾರವಾರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣವಾಗಿರುವುದು ಬಹಳ ಉಪಯುಕ್ತವಾಗಿದೆ. ಕೋವಿಡ್19 ಮತ್ತು ಇನ್ನಿತರ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಾಗುವುದಿಲ್ಲ. ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣದಿಂದ ಭವಿಷ್ಯದಲ್ಲಿ ಜಿಲ್ಲೆಗೆ ಆಕ್ಸಿಜನ್ ಸಮಸ್ಯೆಯಾಗುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಡಾ. ನಿತಿನ್ ಪಿಕಳೆ, ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್, ವೈದ್ಯಕೀಯ ಕಾಲೇಜಿನ ನಿರ್ದೇಶಕರು ಡಾ.ಗಜಾನನ ನಾಯಕ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಕುಡ್ತಲಕರ , ಭಾರತೀಯ ಜನತಾ ಪಕ್ಷದ ರಾಜ್ಯ ಮೀನುಗಾರರ ಪ್ರಕೋಷ್ಟಕದ ಸಹ ಸಂಚಾಲಕರು ಗಣಪತಿ ಉಳ್ವೇಕರ, ವೈದ್ಯಕೀಯ ಸಿಬ್ಬಂದಿ, ವೈದ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.