ಉಡುಪಿ : ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ವ್ಯಾಪಕ ಬೆಳೆಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ನಾಶದ ಸಮೀಕ್ಷೆ ಮಾಡಿ ಕಳುಹಿಸಿಕೊಡಲು ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ ಎಂದರು.
ದೇಶಾದ್ಯಂತ ಮಳೆಯ ಪ್ರಮಾಣ ಹೆಚ್ಚಿದೆ. ನಿರೀಕ್ಷೆ ಮಾಡದ ರೀತಿಯಲ್ಲಿ ಎಲ್ಲ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಭತ್ತ, ರಾಗಿ, ಜೋಳ ಅಪಾರ ಪ್ರಮಾಣದಲ್ಲಿ ನಾಶವಾಗುತ್ತಿದೆ. ಭತ್ತ ಒಣಗಿಸಲಾಗದ ಪರಿಸ್ಥಿತಿ ಎದುರಾಗಿದೆ. ಹೊಸ ತಂತ್ರಜ್ಞಾನ ಬಳಸಿಕೊಳ್ಳಲು ರಾಜ್ಯ ಸರಕಾರಕ್ಕೆ ಸೂಚನೆ ಕೊಡಲಾಗಿದೆ. ಅಗ್ರಿಕಲ್ಚರ್ ಇನ್ಪ್ರಾಸ್ಟ್ರಕ್ಚರ್ ಫಂಡ್ ನಿಂದ ಡ್ರೈಯರ್ ಖರೀದಿಗೆ ಕೇಂದ್ರ ವ್ಯವಸ್ಥೆ ಮಾಡಲಿದೆ ಎಂದು ಕೇಂದ್ರ ಸಚಿವೆ ಶೋಭಾ ಹೇಳಿದರು.