ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಕಿತಾ, ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ವೈದ್ಯರ ನಿರ್ಲಕ್ಷ್ಯದಿಂದ ನಿಕಿತಾ ಸಾವಿಗೀಡಾದ್ದಾಳೆ ಎಂದು ಮನೆಯವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಬಿವಿಪಿ ರಾಜ್ಯ ಜೊತೆ ಕಾರ್ಯದರ್ಶಿ ಹರ್ಷಿತ್ ಕೊಯ್ಲು,
ಮುಂದಿನ ಒಂದು ವಾರದೊಳಗೆ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ಸಿಗಬೇಕು. ಇಲ್ಲದಿದ್ದರೆ ಎಬಿವಿಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ವಿದ್ಯಾರ್ಥಿನಿ ನಿಖಿತ ಸಾವಿನ ಕುರಿತು ಸಾಕಷ್ಟು ಗೊಂದಲಗಳಿದ್ದು, ಇದಕ್ಕೆ ಸ್ಪಷ್ಟನೆ ಸಿಗಬೇಕೆಂಬ ಉದ್ದೇಶದಿಂದ ನಾವು ಪ್ರತಿಭಟನೆ ನಡೆಸಿದ್ದೇವೆ. ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಡಿಎಚ್ ಒ ಹಾಗೂ ಡಿಸಿಗೆ ಮನವಿ ಕೊಡುತ್ತೇವೆ ಎಂದರು.
ಕುಂಬಾರರ ಗುಡಿಕೈಗಾರಿಕೆ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು ಮಾತನಾಡಿ, ವಿದ್ಯಾರ್ಥಿನಿ ನಿಖಿತ ಸಾವಿನ ಘಟನೆ ನೋವಿನ ಸಂಗತಿ. ಕುಟುಂಬಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಆಸ್ಪತ್ರೆಯವರು ಸರಿಯಾದ ಸ್ಪಷ್ಟೀಕರಣ ನೀಡಿಲ್ಲ. ಈಗಾಗಲೇ ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ವಿದ್ಯಾರ್ಥಿನಿ ಮೃತಪಟ್ಟ ಬಳಿಕ ಕುಟುಂಬಕ್ಕೆ ಹಾಗೂ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಅದೊಂದು ಗೊಂದಲ ಇನ್ನೂ ಕೂಡ ಕಾಡುತಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕುಲಾಲ ಸಂಘದ ವತಿಯಿಂದ ಎಸ್ಪಿ, ಡಿಎಚ್ಒ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡುತ್ತೇವೆ. ವಿದ್ಯಾರ್ಥಿನಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡದಿದ್ರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದರು.