ಉಡುಪಿ: ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಉಡುಪಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಇಂದು ಪ್ರತಿಭಟನಾ ಸಭೆ ನಡೆಸಲಾಯಿತು.
ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಸೌಜನ್ಯ ಪ್ರಕರಣ ತಾರ್ಕಿಕ ಅಂತ್ಯ ಕಾಣಬೇಕಾದರೆ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸೌಜನ್ಯ ಕುಟುಂಬದವರು ಅಥವಾ ಸಿಬಿಐ ತನಿಖಾ ತಂಡ ಅಥವಾ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಅವಕಾಶವಿದೆ. ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಇದೆ ರೀತಿ ದ್ವಂದ್ವ ದ್ವೇಷದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದ್ರು.
ಎಬಿವಿಪಿ ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ, ಕೃತಿ, ನಗರ ಹೋರಾಟ ಪ್ರಮುಖ್ ಭೂಷಣ್, ಪ್ರಸನ್ನ ಮೊದಲಾದವರು ಉಪಸ್ಥಿತರಿದ್ದರು.