ಉಡುಪಿ: ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಜ.21ರಿಂದ ಜ.29ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ.
ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಸಮಸ್ತ ಕಾರ್ಯಕರ್ತರು ಈ ಬೃಹತ್ ಅಭಿಯಾನದಲ್ಲಿ ಕೈಜೋಡಿಸಿ, ಪ್ರತಿ ಮನೆಯನ್ನು ಸಂಪರ್ಕಿಸುವ ಮೂಲಕ ಸರಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಮತದಾರರಲ್ಲಿ ವಿಶೇಷ ಅರಿವು ಮೂಡಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಕರೆ ನೀಡಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದಲ್ಲಿ ಬೂತ್ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳ ಸಂಪರ್ಕ, ಪ್ರತೀ ಮನೆಗೆ ಸರಕಾರದ ಸಾಧನೆಗಳ ಕರಪತ್ರ ಮತ್ತು ಸ್ಟಿಕ್ಕರ್ ವಿತರಣೆ ಹಾಗೂ ಮಿಸ್ ಕಾಲ್ ಕೊಡುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದರು.
ಜ.21ರಂದು ಸಂಜೆ 4ಗಂಟೆಗೆ ಉಡುಪಿ ನಗರದ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಮುಂಭಾಗದಲ್ಲಿ ಅಭಿಯಾನದ ಉದ್ಘಾಟನೆ ನೆರವೇರಲಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಉಸ್ತುವಾರಿ ಸಚಿವ ಎಸ್ ಅಂಗಾರ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ವಕ್ತಾರ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ್ ಇದ್ದರು.