ಬ್ರಹ್ಮಾವರ: ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ 9 ಗಂಟೆ ನಡೆದಿದೆ.
ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್ ಕೆದ್ಲಾಯ(19) ಮೃತದುರ್ದೈವಿಗಳು. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದುಬಂದಿದೆ.
ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿ ಬೈಕ್ ಸಮೇತ ಇಬ್ಬರು ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ