ಉಡುಪಿ: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಪಕ್ಷಕ್ಕೆ ಅಭೂತಪೂರ್ವ ಹಾಗೂ ಅತಿ ದೊಡ್ಡ ಗೆಲುವು ತಂದುಕೊಡುವಲ್ಲಿ ಒಕ್ಕಲಿಗ ಸಮುದಾಯ ಹಾಗೂ ಒಕ್ಕಲಿಗ ಸಮುದಾಯದ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಶ್ರಮ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಉಡುಪಿ ಜಿಲ್ಲಾ ಒಕ್ಕಲಿಗರ ಸಂಘ ಆಗ್ರಹಿಸಿದೆ.
ಈ ಬಗ್ಗೆ ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಅವರು, ಡಿ.ಕೆ.ಶಿವಕುಮಾರ್ ಪಕ್ಷದ ಗೆಲುವಿಗೆ ಅವರು ಹಗಲಿರುಳು ದುಡಿದಿದ್ದಾರೆ. ರಾಜ್ಯಾದ್ಯಂತ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿದ್ದಾರೆ. ಒಕ್ಕಲಿಗ ಸಮುದಾಯ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. 1999ರಿಂದ 2004ರವರೆಗೆ ಒಕ್ಕಲಿಗ ಸಮುದಾಯದ ನಾಯಕ ಎಸ್.ಎಂ.ಕೃಷ್ಣ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾಗಿದ್ದರು.
ಅವರ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿಲ್ಲ. ಹಾಗಾಗಿ ಈ ಬಾರಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡುವ ಮೂಲಕ ಕಾಂಗ್ರೆಸ್ ಒಕ್ಕಲಿಗರ ಪರವಾಗಿ ನಿಲ್ಲಬೇಕು ಎಂದು ಒತ್ತಾಯಿಸಿದರು.