ಉಡುಪಿ: ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಸರ್ಕಾರ ಜನ ಸ್ಪಂದನ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಿದೆ. ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿ, ಅಸಹಾಯಕವಾಗಿದೆ ಎಂದು ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದು, ಬಂದ ಕಡತಗಳನ್ನು ವರ್ಗಾವಣೆ ಮಾಡುವ ಕಾರ್ಯಕ್ರಮ ಇದಾಗಿದೆ. ಸ್ಥಳದಲ್ಲಿ ಯಾವುದೇ ಸಮಸ್ಯೆಗಳಿಗೆ ಪರಿಹಾರ ನೀಡಿಲ್ಲ. ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಮಾಡಿದೆ ಎಂದು ವ್ಯಂಗ್ಯವಾಡಿದರು.
ದುರಾದೃಷ್ಟಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿಯನ್ನು ಪೂರೈಸಲಾಗದೆ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಗೃಹಲಕ್ಷ್ಮಿಯಲ್ಲಿ ಎಲ್ಲರಿಗೂ ಹಣ ಬರುತ್ತಿಲ್ಲ. ಯುವನಿಧಿ ವಿಫಲವಾಗಿದೆ, ಹೊಸ ಬಸ್ ಬಿಡದೆ ಶಕ್ತಿ ಯೋಜನೆ ಜಾರಿ ಮಾಡಿದ್ದು, ವಿದ್ಯಾರ್ಥಿಗಳು ಬಸ್ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.