ಉಡುಪಿ: ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಒಂದೆರಡು ದಿನ ವಿಳಂಬ ಆಗಬಹುದು ಅಷ್ಟೇ. ಪ್ರತಿ ತಿಂಗಳು ಅವರ ಖಾತೆಗೆ ಹಾಕುವ ಸಂದರ್ಭದಲ್ಲಿ ಸ್ವಲ್ಪ ವ್ಯತ್ಯಾಸ ಆಗಬಹುದು. ಒಂದು ಕೋಟಿ 8 ಲಕ್ಷ ಜನರಿಗೆ ಖಂಡಿತವಾಗಿ ಹಣ ತಲುಪುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗೃಹಲಕ್ಷ್ಮಿ ಹಣ ಸಂದಾಯ ವಿಳಂಬ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸುಮಾರು ಎರಡೂವರೆ ಸಾವಿರ ಕೋಟಿ ಪ್ರತಿ ತಿಂಗಳು ಸಂದಾಯ ಆಗುತ್ತಿದೆ. ಇನ್ನೂ ಆರೇಳು ಲಕ್ಷ ಜನ ಉಳಿದುಕೊಂಡಿದ್ದಾರೆ. ಅವರಲ್ಲಿ ಎರಡು ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮನೆಗೆ ಹೋಗಿ ತಿಳುವಳಿಕೆ ಮಾಡಿ ಸೇರ್ಪಡೆಗೊಳಿಸುತ್ತಾರೆ. ಬ್ಯಾಂಕ್ ಅಕೌಂಟ್ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆಯುತ್ತೇವೆ ಎಂದರು.
ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಟೆಂಡರ್ ಆಗಿದೆ. ಆದಷ್ಟು ಬೇಗ ಟೆಂಡರ್ ಮುಗಿಸಿ ಮೊಟ್ಟೆ ನೀಡುವ ಕೆಲಸಕ್ಕೆ ಚಾಲನೆ ಕೊಡುತ್ತೇವೆ ಎಂದರು. ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯಾಗಿ ಬೆಳೆಸುತ್ತೇವೆ ಎಂದ ಅವರು, ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಅಲ್ಲಿ ಸುವರ್ಣಸೌಧ ಇದೆ, ಏರ್ಪೋರ್ಟ್ ಇದೆ, ಜಿಲ್ಲೆಯ ವಿಸ್ತೀರ್ಣ ದೊಡ್ಡದಾಗಿದೆ. ಅತಿ ಹೆಚ್ಚು ಶಾಸಕರು ಇರುವ ಜಿಲ್ಲೆ ಬೆಳಗಾವಿ ಎಂದರು.