ಉಡುಪಿ: ಸ್ವ-ಸಹಾಯ ಸಂಘಗಳು ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸಿದರೆ ಮಾತ್ರ ಹೆಚ್ಚು ಲಾಭ ಗಳಿಸಲು ಸಾಧ್ಯವಿದೆ. ಹೀಗಾಗಿ ಸಂಜೀವಿನಿ ಸದಸ್ಯರು ಈ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ಇವರ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಮಲ್ಪೆ ಬೀಚ್ನಲ್ಲಿ ಇಂದು ನಡೆದ ಜಿಲ್ಲಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಸರಕಾರ ಹೆಣ್ಣುಮಕ್ಕಳು ಸ್ವ-ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣುಮಕ್ಕಳು ಇದರ ಉಪಯೋಗ ಪಡೆದುಕೊಂಡು ಆರ್ಥಿಕರಾಗಿ ಸಬಲರಾಗಿ ಸ್ವಾವಲಂಭಿಗಳಾಗಬೇಕು ಎಂದರು.
ಉತ್ಪನ್ನಗಳು ಚೆನ್ನಾಗಿದ್ದಲ್ಲಿ ಆನ್ಲೈನ್ ಮೂಲಕ ಗ್ರಾಹಕರು ಖರೀದಿಸಲು ಮುಂದಾಗುತ್ತಾರೆ. 300 ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿರುವ ಸ್ವ -ಸಹಾಯ ಸಂಘದ ಉತ್ಪನ್ನಗಳಾದ ಜೀನಿ ಹಾಗೂ ದೇಸಿ ಎಂಬ ಹೆಸರಿನ ಆಹಾರ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಕೋಟಿಗಟ್ಟಲೆ ವಹಿವಾಟು ನಡೆಸುತ್ತಿದೆ. ಅಲ್ಲದೇ ಆನ್ಲೈನ್ ಮೂಲಕವೂ ಸಹ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ ಎಂದ ಅವರು, ಸ್ವ-ಸಹಾಯ ಸಂಘಗಳು ಪ್ರಾರಂಭಿಕ ಹಂತದಲ್ಲಿ ಮುತುವರ್ಜಿ ವಹಿಸಿ ಉತ್ಪನ್ನಗಳು ಉತ್ಪಾದಿಸಿ, ಮಾರಾಟ ಮಾಡಿದ್ದಲ್ಲಿ ಮಾರುಕಟ್ಟೆಯಲ್ಲಿ ಯಶಸ್ಸುಗೊಳಿಸಲು ಸಾಧ್ಯ ಎಂದರು.
ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಮಾತನಾಡಿ, ಮಹಿಳೆಯರು ತಯಾರಿಸಿದ ವಸ್ತುಗಳ ಮಾರಟ ಹಾಗೂ ಪ್ರದರ್ಶಕ್ಕಾಗಿ ಒಟ್ಟು 40 ಮಳಿಗೆಗಳನ್ನು ತೆರೆದಿದ್ದು, ಸೂಕ್ತ ಮಾರುಕಟ್ಟೆ ರೂಪಿಸಲಾಗಿದೆ ಎಂದರು.
ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಪಾಸ್ಟ್ ಫುಡ್ ಇತ್ಯಾದಿಗಳು ಲಭ್ಯವಿದ್ದು, ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ, ಉಡುಪಿ ತಾಲೂಕು ಒಕ್ಕೂಟದ ಅಧ್ಯಕ್ಷೆ ಲತಾ ಅಶೋಕ್,ಕುಂದಾಪುರ ತಾಲೂಕು ಒಕ್ಕೂಟದ ಅಧ್ಯಕ್ಷೆ ವಿಜಯಾ ಗಾಣಿಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು.