ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾವಳಿ- 2023-24 ನ.23 ರಿಂದ 26ರವರೆಗೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ ಎಂದು ಕಾಲೇಜು ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ತಿಳಿಸಿದರು.
ಉಡುಪಿ ಪಿಪಿಸಿ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಾಲ್ಕು ದಿನಗಳ ಕ್ರೀಡಾಕೂಟದಲ್ಲಿ 16 ತಂಡಗಳು, 250 ಕ್ರೀಡಾಪಟುಗಳು, 50 ಕ್ರೀಡಾ ತರಬೇತುದಾರರು, 50 ತಂಡದ ವ್ಯವಸ್ಥಾಪಕರು ಮತ್ತು ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದರು.
ಸೌರಬ್ ನಂದಲ್, ಅಮಾನ್, ಜಾಕೀರ್ ಸಹಿತ ಹಲವು ಮಂದಿ ಪ್ರಸಿದ್ಧ ಪ್ರೊ ಕಬಡ್ಡಿ ಆಟಗಾರರು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ದೇಶದ ಒಟ್ಟು 460 ವಲಯಗಳಿಂದ ಆಯ್ಕೆಗೊಂಡ ಬಲಾಢ್ಯ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಕರ್ನಾಟಕದಿಂದ ಮೈಸೂರು ಮತ್ತು ಮಂಗಳೂರು ವಿವಿ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಹಗಲು ಮತ್ತು ರಾತ್ರಿ ಪಂದ್ಯಾವಳಿಗಳು ನಡೆಯಲಿದ್ದು, ಕ್ರೀಡಾಪಟುಗಳು, ತಂಡದ ವ್ಯವಸ್ಥಾಪಕರು, ರೆಫ್ರಿಗಳಿಗೆ ಸುಸಜ್ಜಿತ ಉಚಿತ ವಸತಿ, ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ನ.23ರಂದು ಬೆಳಿಗ್ಗೆ 7 ಗಂಟೆಗೆ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಭೂಮಿಪೂಜೆ ನೆರವೇರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಸಮಾರಂಭವು ಬೆಳಿಗ್ಗೆ 10 ಗಂಟೆಗೆ ಮಂಗಳೂರು ವಿವಿಯ ಉಪಕುಲಪತಿ ಡಾ.ಜಯರಾಜ್ ಅಮೀನ್ ಅಧ್ಯಕ್ಷತೆ ಯಲ್ಲಿ ನಡೆಯಲಿದೆ. ಕಬಡ್ಡಿ ಕ್ರೀಡೆಯಲ್ಲಿ ಅರ್ಜುನ್ ಪ್ರಶಸ್ತಿ ಪುರಸ್ಕೃತ ರಾಕೇಶ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ., ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್., ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್ ಉಪಸ್ಥಿತರಿದ್ದರು.