ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡಿನ ಹುತಾತ್ಮ ಸೈನಿಕ ಸ್ಮಾರಕದ ಎದುರು ಇಂದು ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, 40% ಸರ್ಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಧಿಕ್ಕಾರ, ಸುಳ್ಳುಗಾರ ಮೋದಿ ಅವರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ನಡೆಸಿದ ಬಳಿಕ ಬಿಜೆಪಿಯವರು ಭಯ ಬಿದ್ದಿದ್ದಾರೆ. ಹೇಗಾದರೂ ಮಾಡಿ ಅವರ ಧ್ವನಿ ಅಡಗಿಸಬೇಕು ಎಂಬ ಉದ್ದೇಶದಿಂದ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕೋರ್ಟ್ ತೀರ್ಪು ಬಂದ ಕೇವಲ 24 ತಾಸಿನ ಒಳಗೆ ಅವರನ್ನು ಅನರ್ಹಗೊಳಿಸಿರುವುದರ ಹಿಂದೆ ಷಡ್ಯಂತ್ರ ಇದೆ. ಇದನ್ನು ಖಂಡಿಸುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ನಾಯಕರಾದ ಎಂ.ಎ ಗಫೂರ್, ರಮೇಶ್ ಕಾಂಚನ್, ಅಮೃತ್ ಶಣೈ, ಪ್ರಸಾದ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಇದ್ದರು.