ಉಡುಪಿ: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಮುಷ್ಕರ ನಡೆಸಿದರು.
ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ನೇತೃತ್ವದಲ್ಲಿ ಪದಾಧಿಕಾರಿಗಳು ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಆಗಮಿಸುತ್ತಿದ್ದ ಸರಕಾರಿ ನೌಕರರ ಮನವೊಲಿಸಿ ವಾಪಾಸ್ಸು ಕಳುಹಿಸಿದರು. ಆದರೆ ಹೊರಗುತ್ತಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿರುವುದು ಕಂಡುಬಂತು. ಜಿಲ್ಲೆಯ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಸೇರಿದಂತೆ ಬಹುತೇಕ ಸರಕಾರಿ ಕಚೇರಿಗಳು ನೌಕರರ ಗೈರು ಹಾಜರಿಯಿಂದ ಖಾಲಿಖಾಲಿಯಾಗಿರುವುದು ಕಂಡುಬಂತು.
ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಕೆಲವು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.