ಉಡುಪಿ: ಮಣಿಪಾಲ – ಪೆರಂಪಳ್ಳಿ – ಶೀಂಬ್ರ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಶಾಸಕರಾದ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ 7 ಕೋಟಿ ರೂ. ಅನುದಾನ ಮಂಜೂರಾಗಿ ಭಾಗಶಃ ಕಾಮಗಾರಿ ಪೂರ್ಣಗೊಂಡಿದೆ.
ಈ ರಸ್ತೆ ಹಾದುಹೋಗುವ ಪೆರಂಪಳ್ಳಿಯ ಶೀಂಬ್ರ ಸೇತುವೆ ಬಳಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗದ ಸಮಸ್ಯೆ ಉಂಟಾಗಿ ರಸ್ತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಸ್ಥಳೀಯರ ಮನವಿಯಂತೆ ಶಾಸಕ ಕೆ. ರಘುಪತಿ ಭಟ್ ಅವರು ಇಂದು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ. ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನ ಪಡಿಸಲು 50 ಲಕ್ಷ ಮಂಜೂರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಮೂಲಕ ಜಾಗ ಬಿಟ್ಟುಕೊಡುವ ಖಾಸಗಿ ಜಾಗದ ಮಾಲೀಕರಿಗೆ ಪರಿಹಾರ ನೀಡುವುದಾಗಿ ಶಾಸಕರು ತಿಳಿಸಿದರು. ಇದಕ್ಕೆ ಖಾಸಗಿ ಜಾಗದ ಮಾಲೀಕರು ಸಮ್ಮತಿ ಸೂಚಿಸಿದರು. ಶೀಘ್ರವೇ ರಸ್ತೆ ಕಾಮಗಾರಿಯನ್ನು ಆರಂಭಿಸುವಂತೆ ಶಾಸಕರು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯೆ ಅರುಣಾ ಪೂಜಾರಿ, ಉಡುಪಿ ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರ್ ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.