ಉಡುಪಿ: ಕೇಂದ್ರ ಸರಕಾರವು ರಾಷ್ಟ್ರದ ಸಂವಿಧಾನದ ಆಶಯದಂತೆ ನೀತಿ ನಿಯಮಗಳನ್ನು ರೂಪಿಸಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಬೇಕು. ಭಾಷೆಯನ್ನು ಕಲಿಯುವ ಬಗ್ಗೆ, ಬಳಸುವ ಬಗ್ಗೆ ಅತಿಯಾದ ನಿರ್ಬಂಧ ವಿಧಿಸಿದಲ್ಲಿ ಅನ್ಯ ಭಾಷಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗುವ ಅಪಾಯಗಳಿವೆ ಎಂದು ಹಿರಿಯ ಸಾಹಿತಿ ಡಾ.ಎನ್.ತಿರುಮಲೇಶ್ವರ ಭಟ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಶನಿವಾರ ಆಯೋಜಿಸಲಾದ 13ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.
ಮಾತೃಭಾಷೆಯಲ್ಲೇ ಶಿಕ್ಷಣ ದೊರೆಯುವುದು ಅತ್ಯುತ್ತಮ ವ್ಯವಸ್ಥೆ. ಆದರೆ ನೂರಕ್ಕೆ ನೂರರಷ್ಟು ಈ ವ್ಯವಸ್ಥೆ ಸಾಧ್ಯವಾಗುವುದಿಲ್ಲ. ಕೆಲವು ಭಾಷೆಗಳಲ್ಲಿ ಸಂಖ್ಯೆಯ ಕಲ್ಪನೆಯೇ ಇಲ್ಲ. ಕೆಲವು ಭಾಷೆಗಳಲ್ಲಿ ಲಿಪಿಯೇ ಇಲ್ಲ. ಇಂತಹ ಸಂದರ್ಭದಲ್ಲಿ ಮಾತೃಭಾಷೆ ಬಳಕೆ ಕಾರ್ಯಸಾಧುವಲ್ಲ ಎಂದರು.
ಚಿಂತಕಿ ವೀಣಾ ಬನ್ನಂಜೆ ಸಮ್ಮೇಳನವನ್ನು ಉದ್ಘಾಟಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ದೇವಳದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಪೂರ್ಣಿಮಾ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಜಾನಪದ ವಿದ್ವಾಂಸ ಡಾ.ಗಣನಾಥ ಎಕ್ಕಾರು ಮುಖ್ಯ ಅತಿಥಿಗಳಾಗಿದ್ದರು.
ಪುಸ್ತಕ ಮಳಿಗೆಯನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಸಮ್ಮೇಳನಾಧ್ಯಕ್ಷರ ಪುಸ್ತಕವನ್ನು ವಿಮರ್ಶಕ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡಕ ಬಿಡುಗಡೆಗೊಳಿಸಿದರು. ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ವಳಕಾಡು ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲಾ, ಕಸಾಪ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಕಸಪಾ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜನಿ ವಸಂತ್ ಉಪಸ್ಥಿತರಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು.
ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ವಂದಿಸಿದರು. ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು.