ಉಡುಪಿ: ಶ್ರೀ ನಾರಾಯಣ ಗುರುಗಳಿಗೆ ಪಠ್ಯಪುಸ್ತಕದಲ್ಲಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ರೋಹಿತ್ ಚಕ್ರತೀರ್ಥ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳ ಮುಖಂಡರು ಇಂದು ಕರ್ನಾಟಕ ರಾಜ್ಯ ಯಕ್ಷಗಾನ ಸಮ್ಮೇಳನದ ಮುಖ್ಯದ್ವಾರದ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ಮೂಲಕ ಘೋಷಣೆ ಕೂಗುತ್ತಾ ಕುಂಜಿಬೆಟ್ಟುವಿನ ಎಂಜಿಎಂ ಮೈದಾನದ ಸಮೀಪದ ಯಕ್ಷಗಾನ ಸಮ್ಮೇಳನದ ಮುಖ್ಯದ್ವಾರದ ಬಳಿ ಆಗಮಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆಯಿತು. ಸಮ್ಮೇಳನದ ಆವರಣದೊಳಗೆ ಹೋಗಲು ಅವಕಾಶ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಪಡಿಸಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಯಕ್ಷಗಾನ ಸಮ್ಮೇಳನ ನಡೆಯುವ ಆವರಣದೊಳಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದರು. ಆದರೆ ಪೊಲೀಸರು ಇದಕ್ಕೆ ತಡೆಯೊಡ್ಡಿದರು. ಸಂಘಟಕರನ್ನು ಸ್ಥಳಕ್ಕೆ ಕರೆಸುವಂತೆ ಪ್ರತಿಭಟನಾಕಾರರು ಪಟ್ಟುಹಿಡಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ರೋಹಿತ್ ಚಕ್ರತೀರ್ಥ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗೋ ಬ್ಯಾಕ್ ಎಂಬ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.