ಉಡುಪಿ: ವಾಹನ ಚಾಲಕರು, ನೀರುಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಬರ್ಸ್ ಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯದ ಒಟ್ಟು 15 ಸಾವಿರಕ್ಕೂ ಅಧಿಕ ನೌಕರರ ನೇರಪಾವತಿಗೆ ಕ್ರಮವಹಿಸಬೇಕು ಎಂದು ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿನಯ್ ಕುಮಾರ್ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದೆ ಎಂದು ದೂರಿದರು.
ಪ್ರತಿ ಬಾರಿ ಕೂಡ ಹೊರಗುತ್ತಿದೆ ನೌಕರರನ್ನು ನೇರ ಪಾವತಿಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದರೂ ಸರಕಾರ ಪೌರಕಾರ್ಮಿರನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದೆ. ಈ ಮೂಲಕ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬ ಧೋರಣೆ ತಳೆಯುತ್ತಿದೆ ಎಂದು ಆರೋಪಿಸಿದರು.
ಜ.25 ರೊಳಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ ನೇರಪಾವತಿಗೆ ಹಾಗೂ ಖಾಯಂ ಮಾಡಲು ಕ್ರಮ ವಹಿಸಬೇಕು. ಇಲ್ಲದಿದ್ದರೆ, ಜ.31 ರಂದು ವಿಧಾನಸೌಧ ಮುತ್ತಿಗೆ ಹಾಗೂ ಬೆಂಗಳೂರು ಚಲೋ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯರಾದ ನಿರಂಜನ್, ಪ್ರಸಾದ್ ಕೊರಗ, ರವೀಂದ್ರ ಉಪಸ್ಥಿತರಿದ್ದರು.