ಕಾರವಾರ: ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿಕೊಂಡಿದ್ದಾರೆ.
ಕುಮಟಾದಲ್ಲಿ ಶನಿವಾರ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ್ ಹೆಗಡೆ, ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ಎಚ್ಚರಿಸಿದ್ದರು. ಇದನ್ನು ಬೇಕಾದರೆ ಬೆದರಿಕೆ ಅಂತ ಬೇಕಾದರೂ ತಿಳಿಯಿರಿ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ.
ಶಿರಸಿಯ ಸಿಪಿ ಬಜಾರ್ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ಥಾನ ಕಾಣುತ್ತದೆ ಎಂದು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಈ ಕಾರ್ಯಕ್ರಮದಲ್ಲೇ ಸಿದ್ದರಾಮಯ್ಯ ಅವರು ಮೊದಲು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ಬಂದಿಲ್ಲ ಎಂದು ಹೇಳಿದರು. ಆಹ್ವಾನ ಬಂದ ಮೇಲೆ ನಾನು ಹೋಗುವುದಿಲ್ಲ ಎಂದು ಹೇಳೀದರು. ʻʻನೀನು ಬಾ ಅಥವಾ ಬಿಡು. ಆದರೆ, ರಾಮ ಜನ್ಮಭೂಮಿಯಲ್ಲಿ ನಡೆಯೋದು ಏನೂ ನಿಲ್ಲೋದಿಲ್ಲ ಮಗನೇʼʼ ಎಂದು ಅನಂತ ಕುಮಾರ್ ಹೆಗಡೆ ಏಕವಚನದಲ್ಲಿ ನಿಂದಿಸಿದ್ದರು.
ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಕುಮಟಾ ಠಾಣೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು, ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ್ದಾಗಿ ಎಫ್ಐಆರ್ ಉಲ್ಲೇಖಿಸಿದ್ದಾರೆ. ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.