ಗೋಕರ್ಣ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಯವರು ಭಾನುವಾರ ಗೋಕರ್ಣದ ಅಶೋಕೆಯಲ್ಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಸ್ವಾಮೀಜಿಯವರು ಗವಿಸಿದ್ದೇಶ್ವರ ಶ್ರೀಗಳಿಗೆ ವಿವಿವಿ ಪರಿಕಲ್ಪನೆ ಬಗ್ಗೆ ವಿವರಿಸಿದರು. ಭಾರತೀಯ ಸನಾತನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂಥ ಸಂಸ್ಥೆಗಳ ಅಗತ್ಯತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ಈ ಸಂದರ್ಭದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ಭಾರತ ವಿಶ್ವಗುರುವಾಗುವ ಕಾಲ ಸನ್ನಿಹಿತವಾಗಿದ್ದು, ಭಾರತದ ಪ್ರಾಚೀನ ಕಲೆ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಮೂಲಕ ಇಡೀ ವಿಶ್ವಕ್ಕೆ ಭಾರತ ಮಾರ್ಗದರ್ಶನ ಮಾಡುವಂತಾಗಬೇಕು. ಭಾರತೀಯ ಸಂಪ್ರದಾಯಗಳ ವೈಜ್ಞಾನಿಕ ವಿಶ್ಲೇಷಣೆ ಅಗತ್ಯವಾಗಿದ್ದು, ವೇದ, ಯೋಗ, ಆಯುರ್ವೇದ ಇವೇ ಮೊದಲಾದ 64 ಪ್ರಾಚೀನ ವಿದ್ಯೆ- ಕಲೆಗಳ ಪುನರುಜ್ಜೀವನಕ್ಕೆ ಪರಮಪೂಜ್ಯ ಶ್ರೀಗಳು ನಡೆಸುತ್ತಿರುವ ಪ್ರಯತ್ನ ಅನನ್ಯ ಹಾಗೂ ಅಪೂರ್ವ. ಇದನ್ನು ಕಟ್ಟಿ ಬೆಳೆಸುವಲ್ಲಿ ಸಮಾಜ ಕೊಡುಗೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ವಿಶ್ವವಿದ್ಯಾಪೀಠದ ವಿವಿಧ ಯೋಜನೆಗಳ ವಿವರ ಪಡೆದ ಗವಿಸಿದ್ದೇಶ್ವರ ಸ್ವಾಮೀಜಿಯವರು, ಪ್ರಾಚೀನ ವಿದ್ಯೆ- ಕಲೆಗಳನ್ನು ಉಳಿಸಿ ಬೆಳೆಸಲು ಶ್ರೀಮಠದ ಜತೆ ಕೈಜೋಡಿಸುವುದಾಗಿ ಭರವಸೆ ನೀಡಿದರು.