ಕಾರವಾರ: ಶೀಘ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೇ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ.
ಕಾರವಾರದಲ್ಲಿ ಮಾತನಾಡಿದ ಅವರು, ಕುಮಟಾಕ್ಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಗೆ ತೆರಳುತ್ತಿದ್ದು, ಸ್ಥಳ ಯೋಗ್ಯವಾದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಮಂಜೂರಾತಿ ಪಡೆದು ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತೇನೆ. ಇಡೀಜಿಲ್ಲೆಯ ಜನರಿಗೆ ಉಪಯೋಗ ಆಗುವಂತೆ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದಿದ್ದಾರೆ.
ಖಾಸಗಿ ಬಗ್ಗೆ ನಾವೆಲ್ಲೂ ಮಾತನಾಡಿಯೇ ಇಲ್ಲ ಎಂದ ಸಚಿವರು, ಖಾಸಗಿಯವರು ನೋಡಿಕೊಂಡು ಹೋಗಿದ್ದರೆ ಅದು ನನಗೆ ಗೊತ್ತಿಲ್ಲ. ಆದರೆ ಒಟ್ಟಾರೆ ಜನತೆಯ ಬೇಡಿಕೆಯಂತೆ ಅಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ. ಈ ಬಗ್ಗೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಜೊತೆಯೂ ಚರ್ಚೆ ಮಾಡುತ್ತೇನೆ ಎಂದರು.