ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟೂ ೨೦ ಮರಳು ದಿಬ್ಬಗಳನ್ನು ತೆರವುಗೊಳಿಸಲು ಸಿಆರ್ಝಡ್ ಸಮಿತಿ ಮೂಲಕ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸಿಆರ್ಝಡ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮರಳು ದಿಬ್ಬಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಪಡೆದುಕೊಂಡರು.
ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮೀನುಗಾರಿಕಾ ದೋಣಿಗಳು ಮತ್ತು ಸ್ಥಳೀಯ ಗೃಹೋಪಯೋಗಿ ದೋಣಿಗಳ ಸಂಚಾರಕ್ಕೆ ಅಡ್ಡಿ ಪಡಿಸುವ ಮರಳು ದಿಬ್ಬಗಳನ್ನು ತೆರವುಗೊಳಿಸುವಂತೆ ಸ್ವೀಕೃತಿಯಾದ ಮನವಿಯ ಅನುಸಾರ ಕಾರವಾರ ತಾಲೂಕಿನ ಕಾಳಿ ನದಿ ಪಾತ್ರದಲ್ಲಿ ೭ ಮರಳು ದಿಬ್ಬಗಳು, ಅಂಕೋಲಾ ತಾಲೂಕಿನ ಗಂಗಾವಳಿ ನದಿ ಪಾತ್ರದಲ್ಲಿ ೨ ಮರಳು ದಿಬ್ಬಗಳು, ಕುಮಟಾ ತಾಲೂಕಿನ ಅಘನಾಶಿನಿ ನದಿ ಪಾತ್ರದಲ್ಲಿ ೪ ಮರಳು ದಿಬ್ಬಗಳು ಮತ್ತು ಹೊನ್ನಾವರ ತಾಲೂಕಿನ ಶರಾವತಿ ನದಿ ಪಾತ್ರದಲ್ಲಿ ೭ ಮರಳು ದಿಬ್ಬಗಳಂತೆ ಒಟ್ಟು ೨೦ ಮರಳು ದಿಬ್ಬಗಳನ್ನು ತೆರವುಗೊಳಿಸಲು ಎನ್.ಐ.ಟಿ.ಕೆ. ತಜ್ಞರು ನೀಡಿರುವ ವರದಿಯನ್ನು ಪರಿಶೀಲಿಸಿ ಮರಳು ದಿಬ್ಬಗಳನ್ನು ತೆರವುಗೊಳಿಸವ ಸಂಬಂಧ ಸಿಆರ್ಝಡ್ ಅನುಮತಿ ಪಡೆಯಲು ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರಗೆ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾ ಸಿಆರ್ಝಡ್ ಸಮಿತಿ ಮೂಲಕ ಕ್ರಮ ವಹಿಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಹಿರಿಯ ಭೂವಿಜ್ಞಾನಿ ಆಶಾ ಎಂ. ಎಸ್., ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ತಳೇಕರ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಪ್ರಸನ್ನ ಪಟಗಾರ ಮುಂತಾದವರು ಇದ್ದರು.