ಕಾರವಾರ: ಬಿಜೆಪಿ ವತಿಯಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಏ.25 ಮತ್ತು 26ರಂದು ‘ವಿಶೇಷ ಮಹಾಪ್ರಚಾರ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ 98 ಕೇಂದ್ರ ಸಚಿವರು, ರಾಷ್ಟ್ರೀಯ ನಾಯಕರು, 150ಕ್ಕೂ ಹೆಚ್ಚು ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.
ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಪತ್ರಿಕಾಗೋಷ್ಠಿ, ರೋಡ್ ಶೋ, ಸಾರ್ವಜನಿಕ ಸಭೆ, ಮನೆ–ಮನೆ ಸಂಪರ್ಕ ಮೂಲಕ ಮತ ಯಾಚನೆ, ಸ್ಥಳೀಯ ಪ್ರತಿಮೆಗಳಿಗೆ ಮಾಲಾರ್ಪಣೆ, ದೇವಸ್ಥಾನ, ಮಠ, ಮಂದಿರಗಳಿಗೆ ಭೇಟಿ ಹಾಗೂ ಸಾರ್ವಜನಿಕರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು. ಅಭಿಯಾನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನ್ಸುಖ್ ಮಾಂಡ್ವಿಯಾ, ರಾಜ್ಯ ಚುನಾವಣಾ ಸಹ– ಉಸ್ತುವಾರಿ ಕೆ.ಅಣ್ಣಾಮಲೈ, ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಸದಾನಂದ ಗೌಡ, ಸಿ.ಟಿ.ರವಿ, ಶೋಭಾ ಕರಂದ್ಲಾಜೆ ಹಾಗೂ ಸಚಿವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿಯೊಂದಿಗೆ ನಾಯಕರು ಮತ್ತು ಕಾರ್ಯಕರ್ತರು ಬೆಳಗ್ಗೆಯಿಂದ ಸಂಜೆ ವರೆಗೆ ಮನೆ-ಮನೆಗೆ ಭೇಟಿ ಬಿಜೆಪಿ ಸರ್ಕಾರಗಳ ಕಾರ್ಯಯೋಜನೆಗಳು ಮತ್ತು ಸಾಧನೆಗಳನ್ನು ತಿಳಿಸಲಿದ್ದಾರೆ.
ಪ್ರಚಾರ ಪ್ರಮುಖರು ಬೆಳಗ್ಗೆ ಮಂದಿರ ದೇವಸ್ಥಾನಗಳಿಗೆ ಭೇಟಿ ನೀಡಿ ಬಳಿಕ ರಾಷ್ಟç ನಾಯಕರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ನಂತರ ಪ್ರಚಾರ ಅಭಿಯಾನ ಶುರುಮಾಡುತ್ತಾರೆ. ಆ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳು ಮತ್ತು ಸಮುದಾಯಗಳ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ. ಕಾರ್ಯಕರ್ತರ ಆಧಾರದಡಿ ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಮಂಡಳದ ಅಧ್ಯಕ್ಷ ನಾಗೇಶ, ರೇಷ್ಮಾ ಮಾಳ್ಸೇಕರ್, ಮಾಲಾ ಹುಲಸ್ವಾರ್ ಹಾಗೂ ಇನ್ನಿತರರು ಇದ್ದರು.