ಕಾರವಾರ: ನೂತನವಾಗಿ ಆಯ್ಕೆಯಾಗಿರುವ ಶಾಸಕ ಸತೀಶ್ ಸೈಲ್ ಅವರಿಗೆ ಮಂತ್ರಿ ಮಂಡಳಿದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ರಾಘು ನಾಯ್ಕ ಒತ್ತಾಯಿಸಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ಸತೀಶ್ ಸೈಲ್ ಅಧಿಕಾರದಲ್ಲಿಲ್ಲದಿದ್ದರೂ ಸಾಕಷ್ಟು ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇಲ್ಲಿನ ಜನರಿಗಾಗಿ ಹಗಲಿರುಳು ಕೆಲಸ ಮಾಡಿದ್ದಾರೆ. ಈ ಕ್ಷೇತ್ರದಲ್ಲಿ ಇರುವ ಎಲ್ಲಾ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಕಟ್ಟಿ ಬೆಳೆಸುವಲ್ಲಿ ಅವಿರತವಾಗಿ ಶ್ರಮಿಸಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಹೇಳಿದರು.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ, ಮಲ್ಲಿಕಾರ್ಜುನ್ ಖರ್ಗೆ ಸೈಲ್ ಅವರು ಮಾಡಿದ ಸೇವೆಯನ್ನು ಪರಿಗಣಿಸಬೇಕು. ಈ ಬಾರಿ ಮಂತ್ರಿ ಸ್ಥಾನ ಅವರಿಗೆ ಸಿಕ್ಕರೆ ಮುಂದೆ ಕಾಂಗ್ರೆಸ್ ಪಕ್ಷಕ್ಕೂ ಅನುಕೂಲವಾಗಲಿದೆ. ಎಲ್ಲಾ ಸಮಾಜದವರೂ ಸೈಲ್ ಅವರನ್ನು ಮಂತ್ರಿಯಾಗಿ ಮಾಡಬೇಕು ಎಂದು ಪಕ್ಷಕ್ಕೆ ಆಗ್ರಹಿಸುತ್ತಿದ್ದಾರೆ ಎಂದರು.