ಕಾರವಾರ: ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಸಿಗಬೇಕು ಎನ್ನುವುದು ರಾಜ್ಯ ಸರ್ಕಾರದ ಆಶಯ ಹಾಗೂ ಗುರಿ. ಈ ಹಿನ್ನೆಲೆಯಲ್ಲಿ ಹಲವಾರು ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾಜುಭಾಗದ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಿಸಬೇಕೆಂಬುದು ಆ ಸಮುದಾಯಗಳ ಬಹುವರ್ಷಗಳ ಬೇಡಿಕೆ. ಇದರ ಅಗತ್ಯತೆಯನ್ನು ಅರಿತ ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.೧೫ರಿಂದ ೧೭ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. ೩ರಿಂದ ೭ಕ್ಕೆ ಹೆಚ್ಚಿಸಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ೭೫ ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಈ ಯೋಜನೆಗಳು ರಾಜ್ಯದ ಇತಿಹಾಸದಲ್ಲೇ ಮೊದಲು ಎಂದರು. ಮತಾಂತರ ನಿಷೇಧ ಕಾಯ್ದೆ ಮೂಲಕ ಈವೆರೆಗೆ ಸಮಾಜದಲ್ಲಿ ನಡೆಯುತ್ತಿದ್ದ ಮೋಸ, ವಂಚನೆ ಮತ್ತು ಪ್ರಲೋಭನೆಗೆ ಕಡಿವಾಣ ಹಾಕಲಾಗಿದೆ.
ರಾಜ್ಯಾದ್ಯಂತ ೮೩೦ ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು ಈ ವರ್ಷ ಹೊಸದಾಗಿ ನಾಲ್ಕು ಶ್ರೀ ನಾರಾಯಣಗುರು ವಸತಿ ಶಾಲೆಗಳನ್ನು ಆರಂಭಿಸಲಾಗಿದೆ. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ಒಂದು ಶಾಲೆ ಆರಂಭವಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಏಳೂವರೆ ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ನಮ್ಮ ವಸತಿ ಶಾಲೆಗಳ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಶೇ.೯೯.೧೦ ರಷ್ಟಿರುವುದು ಹೆಮ್ಮೆಯ ಸಂಗತಿ. ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಓಬವ್ವ ಆತ್ಮರಕ್ಷಣಾ ಕರಾಟೆ ಕಲೆಯನ್ನು ಕಲಿಸಲಾಗುತ್ತಿದೆ ಎಂದು ಹೇಳಿದರು.