ಕಾರವಾರ: ನಗರಸಭೆಯಲ್ಲಿ ದುಡಿಯುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಸಿ.ಐ.ಟಿ.ಯು ನೇತೃತ್ವದಲ್ಲಿ ನಗರಸಭೆಯ ಹೊರಗುತ್ತಿಗೆ ಪೌರ ಕಾರ್ಮಿಕರು ನಗರಸಭೆ ಕಚೇರಿಯ ಹೊರ ಆವರಣದಲ್ಲಿ ಧರಣಿ ನಡೆಸಿದರು.
ಧರಣಿಯಲ್ಲಿ 30 ಕ್ಕೂ ಹೆಚ್ಚು ಪೂರ ಕಾರ್ಮಿಕರು ಭಾಗಿಯಾಗಿದ್ದರು. ಲೋಡರ್, ವಾಟರ್ ಮ್ಯಾನ್ ಳು, ಪಂಪ್ ಹಾಗೂ ಕಂಪ್ಯೂಟರ್ ಅಪರೇಟರ್, ಸ್ಮಶಾನ ಹಾಗೂ ಪಾರ್ಕ್ ಕಾರ್ಮಿಕರು, ಯುಜಿಡಿ ನೀರು ಸಂಸ್ಕರಣೆ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕದ ಕಾರ್ಮಿಕರು, ಸಾರ್ವಜನಿಕ ಶೌಚಾಲಯಗಳ ಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಬೇಕು, ಅಲ್ಲಿಯ ವರೆಗೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸಿವ ಪೌರ ಕಾರ್ಮಿಕರು ಚಿಕ್ಕನ್ ಗುನ್ಯಾ ಹಾಗೂ ಕರೋನಾದ ಲಾಕ್ಡೌನ್ ಸಂದರ್ಭದಲ್ಲಿಯೂ ಜೀವದ ಹಂಗು ತೆರೆದು ಸೇವೆ ಸಲ್ಲಿಸಿದ್ದೇವೆ. ಹೀಗಾಗಿ ಸುಪ್ರೀಂ ಕೋರ್ಟನ ತೀರ್ಪಿನಂತೆ ಎಲ್ಲಾ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಏಳನೇ ವೇತನ ಆಯೋಗದ ಮಧ್ಯಂತರ ಪರಿಹಾರವನ್ನು ನೇರಪಾವತಿ ಮೂಲಕ ಹೊರ ಗುತ್ತಿಗೆ ನೌಕರರಿಗೂ ನೀಡಬೇಕು. ತ್ಯಾಜ್ಯ ನಿರ್ವಹಣೆಯನ್ನು ರದ್ದುಗೊಳಸಬೇಕು. ಜತೆಗೆ ಗುತ್ತಿಗೆ ನೀಡುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಇವುಗಳ ಜತೆಗೆ ಎಲ್ಲಾ ಕಾರ್ಮಿಕರಿಗೆ ವಾರದಲ್ಲಿ ಸಂಬಳ ಸಹಿತ ರಜೆ, ರಾಷ್ಟ್ರೀಯ ಹಬ್ಬಗಳ, ಹಬ್ಬಗಳ ರಜೆ, ಅನಾರೋಗ್ಯ ರಜೆ, ನಿವೃತ್ತಿ ಹಾಗೂ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ಉಪಧನ ನೀಡುವಂತೆ ಆದೇಶ ಹೊರಡಿಸಬೇಕು ಎಂದರು.
ಸರಕಾರದ ಗೃಹಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಉಚಿತ ನೀವೇಶನ ನೀಡಬೇಕು ಎನ್ನುವ ಬೇಡಿಕೆಗಳನ್ನು ಮುಂದಿಟ್ಟರು. ಸಂಜೆಯ ವರೆಗೆ ಧರಣಿಯನ್ನು ಮುಂದುವರೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ಹೊರಟು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ ಸಲ್ಲಿಸಿದರು.
ನಗರದ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಟ್ಟ ನಗರಸಭೆಯ ಕಾಯಂ ನೌಕರರು ಹೊರಗುತ್ತಿಗೆ ನೌಕರರ ಹೊರತಾಗಿಯೂ ಕಸದ ವಾಹನ ಹಾಗೂ ಇತರ ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿದ್ದರು. ಸಿ.ಐ.ಟಿ.ಯು. ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮುನಾ ಗಾಂವ್ಕರ ಹಾಗೂ ಹೊರಗುತ್ತಿಗೆ ಪೌರ ಕಾರ್ಮಿಕರು ಇದ್ದರು.