ಕಾರವಾರ: ಜಿಲ್ಲೆಯ ಬುಡಕಟ್ಟು ಕುಣಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಆಗ್ರಹಿಸಿ ಸೆ.೨೩ರಂದು ಜೋಯಿಡಾದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೊಯಿಡಾ ತಾಲೂಕು ಕುಣಬಿ ಸಮಾಜ ಅಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಘಟಕದ ಅಧ್ಯಕ್ಷ ಅಜಿತ್ ಮಿರಾಶಿ ಹೇಳಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ವರದಿಯನ್ನು ನೀಡಲಾಗಿದೆ.ವಿಳಂಬಕ್ಕೆ ಏನು ಕಾರಣ ಎನ್ನುವುದು ಗೊತ್ತಾಗುತ್ತಿಲ್ಲ ಎಂದರು.
ಕುಣಬಿ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ ಸೇರಿಸಲು ವಿಳಂಬ ಮುಂದುವರಿಸಿದರೆ ಉಗ್ರವಾದ ರೀತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಗೋವಾದಲ್ಲಿ ಕುಣಬಿ ಸಮಾಜವನ್ನು ಈಗಾಗಲೇ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ ೧೦೦ ಸಮುದಾಯ ಅತ್ಯಂತ ಹಿಂದುಳಿದಿದ್ದು, ಸಾಮಾಜಿಕ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅರಣ್ಯದ ಉತ್ಪನ್ನವನ್ನು ಜೀವನ ನಡೆಸುತ್ತಿವೆ. ಸಂವಿಧಾನದ ಅನುಸೂಚಿತ ಬುಡಗಟ್ಟು ಪಂಗಡ ಪಟ್ಟಿಗೆ ಸೇರಿಸಿಕೊಳ್ಳಲು ಹಾಗೂ ಕುಣಬಿ ಸಮಾಜದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಒತ್ತಾಯಿಸಿ ಕಳೆದ ೩೩ ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದೇವೆ ಎಂದರು.
ಕುಣಬಿ ಸಮಾಜ ಅಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವಿಷ್ಣು ಡೇರೇಕರ್, ಪ್ರಸನ್ನ ಗಾವುಡಾ, ಮಹಾಂತೇಶ ಗಾವುಡ, ಸುರೇಶ ವೇಳಿಪ, ಚಂದ್ರಶೇಖರ ಸಾವರಕರ, ದೇವಿದಾಸ ವೇಳಿಪ ಪತ್ರಿಕಾಗೋಷ್ಠಿಯಲ್ಲಿ ಇದ್ದರು.