ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ಅವರ ನಿಧನಕ್ಕೆ ಕಂಬನಿ ಮಿಡಿದ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ, ರಾಣೆ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಶಾಸಕಿ ರೂಪಾಲಿ ಎಸ್.ನಾಯ್ಕ ರಾಣೆ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ, ರಾಣೆ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು. ನಂತರ ಮಾತನಾಡಿದ ಅವರು, ಮಾಜಿ ಸಚಿವ ಶ್ರೀ ಪ್ರಭಾಕರ ರಾಣೆ ನಮ್ಮನ್ನಗಲಿರುವುದು ತೀವ್ರ ಆಘಾತ ತಂದಿದೆ. ಸಚಿವರಾಗಿ, ಶಿಕ್ಷಣ ಪ್ರೇಮಿಯಾಗಿ, ಸಾಮಾಜಿಕ ಸೇವೆಯ ಮೂಲಕ ತೊಡಗಿಕೊಂಡ ಹಿರಿಯ ಜೀವವನ್ನು ಕಳೆದುಕೊಂಡಿರುವುದು ತೀವ್ರ ನೋವನ್ನು ಉಂಟುಮಾಡಿದೆ ಎಂದು ತಿಳಿಸಿದರು.
ವಯಸ್ಕರ ಶಿಕ್ಷಣ ಸಚಿವರಾಗಿ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ರಾಜ್ಯಾದ್ಯಂತ ಮನೆಮಾತಾಗಿದ್ದರು. ಕಾರವಾರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದಲ್ಲದೆ, ಶಿಕ್ಷಣ ಸಂಸ್ಥೆಗಳಿಗೆ ಉತ್ತೇಜನ ನೀಡಿ, ಶೈಕ್ಷಣಿಕ ಕ್ರಾಂತಿ ಉಂಟುಮಾಡಿದ್ದರು. ಹಿರಿಯರು, ಮಾರ್ಗದರ್ಶಕರು, ಹಿತೈಷಿಗಳೂ ಆಗಿದ್ದ ಅವರನ್ನು ಕಳೆದುಕೊಂಡಿರುವುದು ತೀವ್ರ ದುಃಖಕ್ಕೆ ಕಾರಣವಾಗಿದೆ ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.