ಕಾರವಾರ: ಶಿಕ್ಷಕರ ದಿನಾಚರಣೆ ಕೇವಲ ಶಿಕ್ಷಕರ ಸಮ್ಮುಖದಲ್ಲಿ ಆಚರಿಸದೆ, ಶಿಕ್ಷಕರು ಹಾಗೂ ಮಕ್ಕಳನ್ನು ಜೊತೆಗೂಡಿಸಿ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಶಿಕ್ಷಕರ ಮಹತ್ವ ಹಾಗೂ ಶಿಕ್ಷಕರ ಗೌರವದ ಕುರಿತು ಅರಿವು ಮೂಡಿಸುವಂತಾಗಬೇಕು ಎಂದು ವಿಧಾನಸಭೆ ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ನಗರದ ಜಿಲ್ಲಾ ರಂಗಮAದಿರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗುರುವಿನ ಜ್ಞಾನ ಹಾಗೂ ಸರಿಯಾದ ಮಾರ್ಗದರ್ಶನ ಎಂತಹ ವ್ಯಕ್ತಿಯಾದರೂ ಉನ್ನತ ಮಟ್ಟಕ್ಕೆರಸಲು ಸಾಧ್ಯ ಎಂದರು. ಶಿಕ್ಷಕರಿಗೆ ಸರಕಾರದಿಂದ ಒದಗಿಸಬೇಕಾದ ಸೌಲಭ್ಯಗಳ ಕುರಿತು ಈಗಾಗಲೇ ಗಮನಕ್ಕೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಹಾಗೂ ಶಿಕ್ಷಕರ ವಸತಿಗಾಗಿ ೪ ಕೋಟಿ ಅನುದಾನದಲ್ಲಿ ಕಾರವಾರದಲ್ಲಿ ಗುರುಭವನವನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಶಿಕ್ಷಕಕನಿಗೆ ಉತ್ತಮ ಗೌರವ ಸಿಗುವುದು ಅವನ ಪಾಠ ಪ್ರವಚನದಿಂದಲ್ಲ ಅವನ ಉತ್ತಮ ವರ್ತನೆ ಹಾಗೂ ನಡತೆಯಿಂದ, ಮತ್ತು ಶಿಕ್ಷಕರಾದವರು ಮಗುವಿನಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಗುರುತಿಸಿ, ಸರಿಯಾದ ಮಾರ್ಗದರ್ಶನ ನೀಡಬೇಕು. ಎಂದು ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಉಪನ್ಯಾಸ ನೀಡಿದರು. ಜಿಲ್ಲೆಯಲ್ಲಿ ಮಕ್ಕಳ ಆತ್ಮಹತ್ಯೆ ಅತಿ ಹೆಚ್ಚು ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಇದಕ್ಕೆ ಮಕ್ಕಳು ಸೂಕ್ಷ್ಮ ಮನಸ್ಥಿತಿಯೆ ಕಾರಣ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ತಡೆಗಟ್ಟಲು ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ಮನೋಬಲ ಹಾಗೂ ಆತ್ಮಸ್ಥೈರ್ಯ ಬೆಳೆಸುವಂತಾಗಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಾದರೆ ಶಿಕ್ಷಕನು ಮಗುವುವಿನ ಆಸಕ್ತಿ ಹಾಗೂ ಮನಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಹೇಳಿದರು. ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡದ್ದಲ್ಲಿ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಸಾಧ್ಯ, ಮತ್ತು ಶಿಕ್ಷಣ ಕ್ಷೇತ್ರಕ್ಕೆ ತುಲುಪಬೇಕಾದ ಸೌಲಭ್ಯಗಳನ್ನು ತಲುಪಿಸಲು ಸಹಕಾರ ನೀಡಲಾಗುವುದು ಎಂದರು. ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ ಮಾತನಾಡಿ ಶಿಕ್ಷಕರು ಮಕ್ಕಳಿಗೆ ನೈತಿಕತೆ ಸಂಸ್ಕೃತಿ, ಹಾಗೂ ಸಾಮಾಜಿಕ ಮೌಲ್ಯಗಳ ಕುರಿತು ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾರವಾರ ತಾಲೂಕಿನ ಸರಕಾರಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕರಿಗೆ, ನಿವೃತ್ತ ಅನುದಾನಿತ ಶಿಕ್ಷಕರಿಗೆ, ಸರಕಾರಿ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾರವಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಾಳಪ್ಪನವರ ಆನಂದಕುಮಾರ, ಅಂಕೋಲಾ ಅರ್ಬನ್ ಕೋ ಆಪರೆಟಿವ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ, ಶಿರಸಿ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಪ್ರಕಾಶ ಗುನಗಿ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ, ಸಿಬ್ಬಂದಿ, ತಾಲೂಕಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಹಾಗೂ ಇನ್ನಿತರರು ಇದ್ದರು.