ಕಾರವಾರ: ಸರ್ಕಾರದ ನಿರ್ದೇಶನದಂತೆ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ರವರ 107 ನೇ ಜನ್ಮ ದಿನಾಚರಣೆಯನ್ನು ಈ ಬಾರಿ 3 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಿ. ದೇವರಾಜು ಅರಸು 107 ನೇ ಜನ್ಮ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿದ ವ್ಯಕ್ತಿಗಳು ಅಥವಾ ಸಂಘ- ಸಂಸ್ಥೆಗಳನ್ನ ಗುರುತಿಸಿ ಒಬ್ಬರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿರುವ ಯಾವುದೇ ಸಮುದಾಯದ ಕುಲ ಕಸುಬಿಗೆ ಸಂಬಂಧಿಸಿದಂತಹ ವಸ್ತುಗಳನ್ನ ಮಾರಾಟ ಹಾಗೂ ಪ್ರದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅರಸು ಅವರ ಜನ್ಮ ದಿನವಾದ ಆಗಸ್ಟ್ 20 ರಿಂದ 24 ರವರೆಗೆ 4 ದಿನಗಳ ಕಾಲ ಮಳಿಗೆ ತರೆಯಲು ಸಂಬಂಧಪಟ್ಟ ಇಲಾಖಾಧಿಕಾರಿಗಳು ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಮಕ್ಕಳಿಗೆ ಯೋಗ, ಕ್ರೀಡಾ ಸ್ಪರ್ಧೆ, ಅರಣ್ಯದ ಮಹತ್ವದ ತಿಳುವಳಿಕೆ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಮಾಡಬೇಕು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಬೇಕು ಹಾಗೂ ಇದರ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ಒಂದು ಗಂಟೆಯ ಡಿ.ದೇವರಾಜ ಅರಸು ಅವರ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೊಡ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳು ಹಾಜರಿದ್ದರು.