ಕಾರವಾರ: ಬಾಲ ಕಾರ್ಮಿಕತೆ, ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ದೌರ್ಜನ್ಯ ಸಾಮಾಜಿಕ ಪಿಡುಗಾಗಿದ್ದು, ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಯೋಗದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ)ಕಾಯ್ದೆ ೧೯೮೬, ತಿದ್ದುಪಡಿ ೨೦೧೬, ಪೊಕ್ಸೋ ಕಾಯ್ದೆ-೨೦೧೨ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ವಿವಿಧ ಕಾಯ್ದೆಗಳ, ನಿಯಮಗಳ ಕುರಿತು ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಮಕ್ಕಳ ಸ್ನೇಹಿ ಪೊಲೀಸ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ, ಶೋಷಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಲೆಂದು, ಇತಿಹಾಸದ ಸಂಪ್ರದಾಯದ ಹೆಸರಲ್ಲಿ ನಡೆಸಲಾಗುತ್ತಿರುವ ಶೋಷಣೆಯನ್ನು ತಡೆಗಟ್ಟುವ ಸದಾಶಯದಿಂದ ಕಾನೂನಾತ್ಮಕವಾಗಿ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಮಾನವ ಕಳ್ಳ ಸಾಗಾಣಿಕೆ ತಡೆಕಾಯ್ದೆ, ಮಕ್ಕಳ ರಕ್ಷಣೆಯ ಸಲುವಾಗಿ ಈ ಮಕ್ಕಳ ಹಕ್ಕುಗಳ ರಕ್ಷಣೆಯ ವಿವಿಧ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ನಿಮ್ಮ ಮಕ್ಕಳ ಭವಿಷ್ಯ, ರಕ್ಷಣೆಯ ವಿಚಾರದಲ್ಲಿ ಹೇಗೆ ಚಿಂತಿಸುತ್ತೀರೋ ಹಾಗೇ ಸಮಾಜದಲ್ಲಿ ಶೋಷಣೆ, ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಭವಿಷ್ಯ, ರಕ್ಷಣೆ, ಹಕ್ಕುಗಳ ಕುರಿತು ಚಿಂತಿಸಬೇಕು. ಪ್ರತಿಯೊಬ್ಬ ಅಧಿಕಾರಿಯು ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಮಕ್ಕಳ ಭವಿಷ್ಯ ಉಜ್ವಲವಾಗಿ ರೂಪುಗೊಳ್ಳಲು ಸಹಕರಿಸಬೇಕು. ಈ ಕಾಯ್ದೆಗಳ ಸಂಕ್ಷಿಪ್ತ ವಿವರ ಇರುವ ಪ್ರತಿಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯವರು ಮಾಡಬೇಕು.
ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾದವರ, ಮಕ್ಕಳ ಧ್ವನಿಯಾಗಿ ನಾವೆಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಸಮಾಜದ ಅಭ್ಯುದಯದಲ್ಲಿ ಸರ್ವರ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ತಿಳಿಸುವ ಕಾರ್ಯವಾಗಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಲಸದ ಒತ್ತಡದ ನಡುವೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಣೆಯನ್ನು ಪೊಲೀಸ್ ಇಲಾಖೆ, ಸಿಬ್ಬಂದಿಗಳು ಮಾಡುತ್ತಿದ್ದಾರೆ. ವಿವಿಧ ಸಹಾಯವಾಣಿ ಮೂಲಕ ಮಕ್ಕಳ, ಯುವಕ/ತಿಯರ, ವೃದ್ಧರರಕ್ಷಣೆಗೆ ಬೇಕಾದ ಅಗತ್ಯಕ್ರಮ ವಹಿಸಲಾಗುತ್ತಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅರಿವು ಮತ್ತು ಮಕ್ಕಳ ಹಕ್ಕುಗಳ ಜಾಗೃತಿಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಮಕ್ಕಳ ಸ್ನೇಹಿ ಪೊಲೀಸ್ ಪುಸ್ತಕ ಬಿಡುಗಡೆಗೊಳಿಸಿ ಅದನ್ನು ಎಲ್ಲ ಅಧಿಕಾರಿಗಳಿಗೂ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.
ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ ಅವರು, ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯು ಉತ್ತಮವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ. ಲಿಂಗ ತಾರತಮ್ಯ ಅನುಸರಿಸದೇ ಸರ್ವರಿಗೂ ಒಂದೇ ರೀತಿಯ ಕಾನೂನು ಜಾರಿಯಲ್ಲಿದೆ. ಪೊಲೀಸ್ ಇಲಾಖೆಯು ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಸಂವಿಧಾನ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದಲ್ಲಿ ಪ್ರಾಮಾಣಿಕವಾಗಿ ಕಾರ್ಯವೆಸಗಿದಲ್ಲಿ ಮಕ್ಕಳ ಹಕ್ಕುಗಳಿಗೆ, ರಕ್ಷಣೆಗೆ ಯಾವುದೇ ಅಡೆ ತಡೆಗಳಿಗೂ ಆಸ್ಪದವಿಲ್ಲದಂತಾಗುತ್ತದೆ ಎಂದು ತಿಳಿಸಿದರು. ರಾಜ್ಯ ಸರಕಾರವು ೧೪ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದ್ದು, ಮೂಲಭೂತ ಸೌಕರ್ಯಗಳ ಅವಶ್ಯಕತೆ ಇರುವವರಿಗೆ ಸೌಲಭ್ಯ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ಸರಕಾರ ದಕ್ಷತೆಯಿಂದ ಮಾಡುತ್ತಿದೆ.
ಮಕ್ಕಳು ಬೌದ್ಧಿಕ, ಶಾರೀರಿಕ, ಶೈಕ್ಷಣಿಕ, ಮಾನಸಿಕವಾಗಿ ಸದೃಢವಾಗಿ ಬೆಳೆಯಲು ಅನುಕೂಲವಾಗುವಂತೆ ಹಾಗೂ ಅವರನ್ನು ರಕ್ಷಿಸುವ ಸಲುವಾಗಿ ಪೊಕ್ಸೋ ಕಾಯ್ದೆಜಾರಿಗೆತರಲಾಗಿದೆ.ಸದೃಢದೇಶಕಟ್ಟಲು ಸರ್ವಾಂಗೀಣಅಭಿವೃದ್ಧಿ ಸಾಧಿಸುವುದು ಅವಶ್ಯವಾಗಿದೆ ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಗಣೇಶ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಾನವ ಕಳ್ಳಸಾಗಾಣಿಕೆ ಮಕ್ಕಳಿಂದ ವಯೋವೃದ್ಧರಾದಿಯಾಗಿಕಾರ್ಯವ್ಯಾಪ್ತಿ ಪಡೆದುಕೊಂಡಿದೆ. ಹಾಗಾಗಿ ಮಾನವನ ಮೂಲಭೂತ ಹಕ್ಕುಗಳ ರಕ್ಷಣೆ ಕಾನೂನಾತ್ಮಕವಾಗಿ ಅವಶ್ಯಕವಾಗಿದೆ. ಸರಕಾರ ಮಕ್ಕಳಿಗೆ ಸವಲತ್ತುಗಳನ್ನು ನೀಡಿದೆ, ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ದಕ್ಷ, ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಸುಭದ್ರ ಸಮಾಜ ನಿರ್ಮಾಣವಾಗಲು ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅವರ ಶೋಷಣೆ ನಿಲ್ಲಿಸಲು ನಿರಂತರವಾಗಿ ಶ್ರಮಿಸುತ್ತಿರುವಮಕ್ಕಳ ವಿಶೇಷ ಪೊಲೀಸ್ ಘಟಕದ ರುದ್ರೇಶ ಮೇತ್ರಾಣಿ ಮತ್ತು ಜಿಲ್ಲಾಕಾರ್ಮಿಕ ಅಧಿಕಾರಿಅಕ್ಬರ್ ಹಬೀಬ್ಸಾಬ್ ಮುಲ್ಲಾ ಅವರನ್ನು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.