ಕಾರವಾರ: ಅಸ್ವಸ್ಥಗೊಂಡಿದ್ದ ಕಾಡುಕೋಣವನ್ನು ರಕ್ಷಣೆ ಮಾಡಿದ ಘಟನೆ ಸಿದ್ದಾಪುರ ತಾಲೂಕಿನ ನೆಲ್ಲಿಕೊಪ್ಪ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಗಾಯಗೊಂಡ ಕಾಡುಕೋಣ ನಿತ್ರಾಣವಾಗಿ ಅಸಹಾಯಕ ಸ್ಥಿತಿಯಲ್ಲಿ ಬಿದ್ದುಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ. ಮುರಳಿ ಮನೋಹರ, ಡಾ. ವಿನಯ ಅವರು ಸ್ಥಳಕ್ಕೆ ಆಗಮಿಸಿ ಕಾಡುಕೋಣಕ್ಕೆ ಚಿಕಿತ್ಸೆ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸಹಾಯದೊಂದಿಗೆ ಕಾಡುಕೋಣವನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಕೋಣಕ್ಕೆ ಚಿಕಿತ್ಸೆ ನೀಡಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಡಾ. ಅಜ್ಜಯ್ಯ, ಎಸಿಎಫ್ ಹರೀಶ್, ಪಶು ಇಲಾಖೆಯ ಡಾ. ವಿವೇಕ್ ಹೆಗಡೆ ಮತ್ತು ವಲಯ ಅರಣ್ಯ ಅಧಿಕಾರಿ ಬಸವರಾಜ್ ಸೇರಿದಂತೆ ಇಲಾಖೆ ಸಿಬ್ಬಂದಿ ಇದ್ದರು.