ಕಾರವಾರ: ಮಹಿಳೆ ವಿದ್ಯಾವಂತಳಾಗಿ ಉದ್ಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲಳಾಗಿ ಸ್ವಾವಲಂಬಿಯಾಗಿ ಜೀವನ ನಡೆಸಬೇಕು, ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವುದೇ ಮಹಿಳಾ ಆಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲೆಯ ಎನ್.ಜಿ.ಓ, ಸಿ.ಡಿ.ಪಿ.ಓ ಇಲಾಖೆಯ ಕಚೇರಿಯಲ್ಲಿ ಸಭೆ, ಮಹಿಳಾ ಠಾಣೆ, ಒನ್ ಸ್ಟಾಫ್ ಸೆಂಟರ್, ಬಾಲಕಿಯರ/ಮಹಿಳೆಯರ ವಿದ್ಯಾರ್ಥಿನಿಲಯಗಳ ಭೇಟಿ, ಕೈಗಾದಲ್ಲಿ ಮಹಿಳಾ ಕಾರ್ಮಿಕ ಸದಸ್ಯರು ಹಾಗೂ ಬಂಧಿಖಾನೆಯ ಮಹಿಳೆಯರ ಜೊತೆಗೆ ಅವರ ಸಮಸ್ಯೆಗಳ ಕುರಿತು ಸಂವಾದ ನಡೆಸಲಾಗಿದೆ ಹಾಗೂ ಜಿಲ್ಲೆಯಲ್ಲಿ ಹಲವಾರು ಸ್ಥಳಗಳಿಗೆ ಭೇಟಿ ನೀಡಿ ಮಹಿಳೆಯರ ಸಮಸ್ಯೆ ಮತ್ತು ರಕ್ಷಣೆಯ ಕುರಿತಾಗಿ ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯರ ರಕ್ಷಣೆಯ ವಿಚಾರದಲ್ಲಿ ಸಕಾರಾತ್ಮಕ ಅಂಶಗಳು ಕಂಡು ಬಂದಿದ್ದು ಸಂತೋಷದ ವಿಚಾರವಾಗಿದೆ ಎಂದು ತಿಳಿಸಿದರು.
ರಾಜ್ಯದ ೨೯ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ೯ ಪ್ರಕರಣಗಳು ಕಂಡು ಬಂದಿದ್ದು ಅವುಗಳ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಹೆಣ್ಣು ಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಪಾಲಿದೆ ಎಂಬ ಹಕ್ಕಿನನ್ವಯ ಮಹಿಳೆಯರಿಗೆ ಕಾನೂನಾತ್ಮಕವಾಗಿ ಆಸ್ತಿಯಲ್ಲಿ ಪಾಲು ನೀಡಬೇಕು.
ಯಾರೂ ಸಹ ದೌರ್ಜನ್ಯದ ಮೂಲಕ ಆ ಹಕ್ಕಿನ ದಮನ ಮಾಡುವಂತಿಲ್ಲ, ಮಾಡಿದ್ದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ, ಕಾನೂನಿನಿಂದ ದಂಡನೆಗೆ ಒಳಗಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ಯಾಮಲಾ ಸಿ. ಕೆ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿ ಇದ್ದರು.