ಕಾರವಾರ: ತಾಲೂಕಿನ ಬಿಣಗಾದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಿದ ಪೊಲೀಸರು ಕಂಟೇನರ್ ಲಾರಿಯನ್ನು ತಡೆದು ಅದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 26 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಪಡೆದ ಗ್ರಾಮೀಣ ಠಾಣೆ ಪೊಲೀಸರುಗೋವಾ ರಾಜ್ಯದಿಂದ ಅಂಕೋಲಾ ಮಾರ್ಗವಾಗಿ ಹೈದ್ರಾಬಾದ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲಾರಿಯಲ್ಲಿ 814 ಬಾಕ್ಸ್ ಗಳಲ್ಲಿ ಸುಮಾರು 26,29,536 ರೂ. ಮೌಲ್ಯದ ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕೆ ಪರವಾನಗಿ ಇರುವ 30,212 ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಆರೋಪಿ ಚಾಲಕ ಮಹಾರಾಷ್ಟ್ರ ಮೂಲದ ಸುಧಾಕರ ಅರ್ಜುನ ಗೋಲಾಂಡೆ ಎಂಬಾತನನ್ನು ಬಂಧಿಸಿ ಲಾರಿಯನ್ನೂ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಜಿಲ್ಲಾ ವಿಶೇಷ ವಿಭಾಗದ ಪಿ.ಎಸ್.ಐ ಪ್ರೇಮನಗೌಡ ಪಾಟೀಲ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಘವೇಂದ್ರ ನಾಯ್ಕ, ಭಗವಾನ ಗಾಂವಕರ , ಸಂತೋಷಕುಮಾರ ಕೆ.ಬಿ , ಚಾಲಕ ಉಮೇಶ ಗಾಳಿ ಅವರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.