ಕಾರವಾರ: ಕಲಬುರಗಿಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಬೃಹತ್ ವಿರಾಟ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಅ.30ರಂದು ಬೆಳಗ್ಗೆ 10 ಗಂಟೆಗೆ ಕಲಬುರಗಿಯ ನಾಗನಹಳ್ಳಿ ಪೊಲೀಸ್ತರಬೇತಿ ಕೇಂದ್ರದ ಹತ್ತಿರ ರದ್ದೇವಾಡಿ ಬಡಾವಣೆಯಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ನಡೆಯುತ್ತಿದ್ದು, ಸುಮಾರು ಆರು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಡಾ. ಕ, ಲಕ್ಷ್ಮಣ್ರವರು, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌವ್ಹಾಣ್ ಮತ್ತು ಇತರೆ ಮುಖಂಡರುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಧ್ಯಕ್ಷ ನಳಿನ್ಕುಮಾರ್ ಕಟೀಲ್, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷರು, ಮಾಜಿ ಶಾಸಕ ನೆ.ಲ. ನರೇಂದ್ರಬಾಬುರವರು, ಹಿಂದುಳಿದ ಮಂತ್ರಿಗಳು, ಶಾಸಕರು, ಸಂಸದರು, ನಿಗಮ ಮಂಡಳಿ ಅಧ್ಯಕ್ಷರು, ಮಾಜಿ ಶಾಸಕರು, ಮಾಜಿ ಸಂಸದರು ಮತ್ತು ಇತರೆ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು.
ದೇಶದ ಜನಸಂಖ್ಯೆಯಲ್ಲಿ ಪ್ರತಿ ರಾಜ್ಯದಲ್ಲೂ ಶೇ.56ಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಸಣ್ಣ ಸಣ್ಣ ಜಾತಿ ಜನಾಂಗಗಳ ಪ್ರಮಾಣವಿದ್ದರೂ, ಸ್ವಾತಂತ್ರ್ಯ ಬಂದಾಗಿನಿಂದ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರಗಳು ಸರಿಯಾದ ರೀತಿಯ ಸೌಲಭ್ಯಗಳನ್ನು ಒದಗಿಸಲಿಲ್ಲ. ಈಗ ಬಿಜೆಪಿ ಸರಕಾರ ಕಳೆದ 70 ವರ್ಷಗಳಲ್ಲಿ ಹಿಂದುಳಿದ ವರ್ಗಗಳಿಗೆ ದೊರಕದ ಅನೇಕ ಸೌಲಭ್ಯಗಳು, ಸವಲತ್ತುಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ದೊರಕುತ್ತಿದೆ. ಭಾರತ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನವನ್ನು ಕೊಡುವುದರ ಜೊತೆಗೆ ಮೋದಿ ಸಂಪುಟದಲ್ಲಿ ಸುಮಾರು 27 ಜನ ಹಿಂದುಳಿದ ವರ್ಗಗಳ ಸಚಿವರು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.