ಕಾರವಾರ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ನಿನ್ನೆ ಮೊನ್ನೆ ಸೇರ್ಪಡೆಗೊಂಡ ವಿ.ಎಸ್.ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಣ ಬನಸೋಡೆ ಹೇಳಿದ್ದಾರೆ.
ಕಾರವಾರ ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತನಗೆ ಟಿಕೆಟ್ ನೀಡದೆ ಇದ್ದರೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಯಲ್ಲಾಪುರ ಕ್ಷೇತ್ರಕ್ಕೆ ತನಗೆ ಟಿಕೆಟ್ ನೀಡದೇ ಇದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಹೇಳಿದ ಸಂದರ್ಭದಲ್ಲಿ ಯಲ್ಲಾಪುರ ಕ್ಷೇತದಿಂದ ಯಾರೂ ಅರ್ಜಿ ಸಲ್ಲಿಸದ ವೇಳೆ ತಾನು ಕೆಪಿಸಿಸಿ ಸೂಚಿಸಿದಂತೆ ಎರಡು ಲಕ್ಷ ರೂ. ಹಣ ನೀಡಿ ಅರ್ಜಿ ಸಲ್ಲಿಸಿದ್ದೇನೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ನಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕಾಗಿ ದುಡಿದ, ಪಕ್ಷ ಸಂಘಟನೆಯಲ್ಲಿರುವ ವ್ಯಕ್ತಿಗೆ ಟಿಕೆಟ್ ನೀಡಬೇಕು. ಇದರ ಬದಲು ವಲಸೆ ಬಂದವರಿಗೆ ಟಿಕೆಟ್ ನೀಡಿದರೆ ಮೂಲ ಕಾರ್ಯಕರ್ತರನ್ನು ಮೂಲೆಗುಂಪು ಮಾಡಿದಂತೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ವಿ.ಎಸ್.ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಭಿಪಾರ್ಮ ತಮಗೆ ನೀಡಿ ಕಾಂಗ್ರೆಸ್ನಿಂದ ಸ್ಪರ್ಧಿಸಲು ಅವಕಾಶ ನೀಡಬೇಕು. ಅದಿಲ್ಲವಾದಲ್ಲಿ ತಾನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಲ್ಲಾಪುರ ಕ್ಷೇತ್ರದಲ್ಲಿ ಸುಮಾರು ೪೦ ಸಾವಿರ ದಲಿತ ಮತಗಳಿದ್ದು, ಇದು ನಮ್ಮ ಗೆಲುವಿಗೆ ಸಹಕಾರಿ ಆಗಲಿದೆ ಎಂದು ಅಭಿಪ್ರಾಯಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಶೇಖಪ್ಪ ಗುಡ್ಡಣ್ಣನವರ್, ಎಂ.ಆರ್.ಮಲ್ಲಿಕಾರ್ಜುನ, ಪರಮೇಶ ಭೋವಿವಡ್ಡರ ಉಪಸ್ಥಿತರಿದ್ದರು.