ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್ನ ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ನ್ನು ಮುಖ್ಯಮಂತ್ರಿಗಳು ಮಂಡಿಸುವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ.
ಈ ಕುರಿತು ಟ್ವೀಟ್ ಮಾಡಿದ ಅವರು ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ‘ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಯಾರೂ ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ” ಎಂದು ವಿಶ್ವಾಸ ನೀಡಿದ್ದಾರೆ.
ಮುಂದುವರೆದು ” ನನ್ನ ಹಿಂದಿನ ಎಲ್ಲ ಬಜೆಟ್ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜ್ಯದ ಜನರ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಟ್ವೀಟ್ ಮೂಲಕ ರಾಜ್ಯದ ಜನರಿಗೆ ಭರವಸೆ ನೀಡಿದ್ದಾರೆ.
ಈವರೆಗೆ 13 ಬಜೆಟ್ ಮಂಡಿಸಿದ್ದ ಹೆಗ್ಗಳಿಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಲ್ಲಿದ್ದು, ಅದನ್ನು ಸಿದ್ದರಾಮಯ್ಯ ಮುರಿಯುತ್ತಿದ್ದಾರೆ. ಸಿದ್ದರಾಮಯ್ಯ ಡಿಸಿಎಂ, ಹಣ ಕಾಸು ಸಚಿವರಾಗಿ 1995-96ರಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಿ ದ್ದರು. 2018-19ರಲ್ಲಿ ಮೊದಲ ಮುಖ್ಯಮಂತ್ರಿ ಅವಧಿಯ ಕೊನೆಯ ಹಾಗೂ 13ನೇ ಬಾರಿಯ ಆಯವ್ಯಯ ಮಂಡಿಸಿದ್ದರು.