ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ತನಹಳ್ಳಿ ಗ್ರಾಮದಲ್ಲಿ ಗುರುವಾರ ನಸುಕಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕುರಿ ಶೆಡ್‍ಗೆ ಬೆಂಕಿ ಬಿದ್ದು ಸುಮಾರು 40 ಕುರಿಗಳು ಸಜೀವ ದಹನವಾಗಿವೆ.

ವರ್ತನಹಳ್ಳಿ ಗ್ರಾಮದ ತಿಮ್ಮಯ್ಯ ಎಂಬುವರಿಗೆ ಸೇರಿದ ಕುರಿಗಳಾಗಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಅಷ್ಟರಲ್ಲಿ ಬಹುತೇಕ ಕುರಿಗಳು ಸುಟ್ಟು ಕರಕಲಾಗಿದ್ದವು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶ್ರೀನಿವಾಸಪುರ ಪೊಲೀಸ್‌ ಠಾಣಾ ಅಧಿಕಾರಿಗಳು ಹಾಗೂ ಪಶು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.