ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಚಿಕಿತ್ಸೆ ದೊರೆಯಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೇರಿಸುವ ಮೂಲಕ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ 67 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಆಮ್ಲಜನಕ ಉತ್ಪಾದನಾ ಘಟಕವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾಸ್ಪತ್ರೆಯಲ್ಲಿ 67 ಲಕ್ಷ ರೂ. ವೆಚ್ಚ ಮಾಡಿ, ನಿಮಿಷಕ್ಕೆ 960 ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಘಟಕ ಆರಂಭವಾಗಿದ್ದು, ಇದರಿಂದಾಗಿ 196 ಆಕ್ಸಿಜನ್ ಬೆಡ್ಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ. ಚೈನ್ನೈನ ಪೆಟ್ರೋಲಿಯಂ ಕಾರ್ಪೋರೇಷನ್ ಇದಕ್ಕೆ ನೆರವು ನೀಡುವ ಮೂಲಕ ಸಹಕರಿಸಿದೆ ಎಂದರು.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಸಾರ್ವಜನಿಕ ಆಸ್ಪತ್ರೆಗಳು ಮೇಲ್ದರ್ಜೆಗೇರದೆ ಹಲವು ಸೌಲಭ್ಯಗಳಿಂದ ಕೊರತೆ ಅನುಭವಿಸುತ್ತಿದ್ದವು. ಇದೀಗ ಕೇಂದ್ರ ಸರ್ಕಾರ ಜನರ ಆರೋಗ್ಯದ ಕಾಳಜಿಯಿಂದ ವಿಶೇಷ ಗಮನ ಹರಿಸಿ ಯಾವುದೇ ಆಸ್ಪತೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್, ವೈದ್ಯರ ಕೊರತೆಯಾಗದಂತೆ ಕ್ರಮವಹಿಸಿದೆ ಎಂದು ತಿಳಿಸಿದರು.
ಕೋವಿಡ್ ಮೂರನೇ ಅಲೆಯ ಮುಂಜಾಗ್ರತವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಆರಂಭವಾಗಿದ್ದು, ಈಗಾಗಲೇ ತರೀಕೆರೆ, ಕಡೂರು, ಕೊಪ್ಪ, ಶೃಂಗೇರಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಗೆ ಮತ್ತೊಂದು ಘಟಕ ಸ್ಥಾಪನೆ ಅಗತ್ಯವಿದ್ದು ಸುಮಾರು 1 ಕೋಟಿ ಅನುದಾನ ಅವಶ್ಯಕತೆ ಇದ್ದು ವಿವಿಧ ಯೋಜನೆ ಅಡಿ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ ಕೋವಿಡ್ 2ಅಲೆಯ ವೇಳೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ ಸಾಕಷ್ಟು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಅದನ್ನು ಮನಗಂಡ ಕೇಂದ್ರ ಹಾಗೂ ರಾಜ್ಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಸುಸ್ಸಜ್ಜಿತಗೊಳಿಸುವ ಮೂಲಕ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಆಧ್ಯತೆ ನೀಡಿದೆ ಇದರಲ್ಲಿ ಜನಪ್ರತಿನಿಧಿಗಳ ವಿಶೇಷ ಪರಿಶ್ರಮವಿದೆ ಎಂದರು.
ಆಮ್ಲಜನಕ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಯಾವುದೇ ಸಾವು ನೋವುಗಳಾಗಿಲ್ಲ, ಎಷ್ಟೇ ಕಷ್ಟವಾದರೂ ಜಿಲ್ಲಾಡಳಿತ ಆಮ್ಲಜನಕ ಪೂರೈಕೆ ಮಾಡಿದೆ. ಇಂತಹ ಕಷ್ಟದ ವೇಳೆ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿಗಳು ತಮ್ಮ ಪ್ರಾಮಾಣಿಕವಾಗಿ ರೋಗಿಗಳ ಆರೈಕೆಯಲ್ಲಿ ಶ್ರಮಿಸಿದ್ದಾರೆ ಎಂದು ಇದೇ ವೇಳೆ ಸ್ಮರಿಸಿದರು.
ಈ ಸಂದರ್ಭದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಉಮೇಶ್, ಜಿಲ್ಲಾ ಸರ್ಜನ್ ಡಾ.ಮೋಹನ್, ಡಾ.ಪ್ರದೀಪ್, ಡಾ. ಮೀರಾ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ವರಸಿದ್ದಿ ವೇಣುಗೋಪಾಲ್, ಸಿ.ಹೆಚ್. ಲೋಕೇಶ್, ನಗರಸಭೆ ಮಾಜಿ ಅಧ್ಯಕ್ಷ ತಮ್ಮಯ್ಯ, ಸೇರಿದಂತೆ ಮತ್ತಿತರರು ಇದ್ದರು.